ಇಂಫಾಲ: ಮಣಿಪುರ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿದೆ. ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ದಾರೆ.
ಇಂಫಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಯಾಗುತ್ತದೆ, ಜನರು ಸಂತೋಷವಾಗಿರುತ್ತಾರೆ" ಎಂದು ಹೇಳಿದರು. ಬಳಿಕ ಅವರು ಇಂಫಾಲ್ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಕಳೆದ ಮೇ ತಿಂಗಳಲ್ಲಿ ಪರಿಶಿಷ್ಟ ಪಂಗಡದ ಸ್ಥಾನಮಾನ ವಿಷಯವಾಗಿ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಸಂಘರ್ಷ ಭುಗಿಲೆದ್ದಿತ್ತು. ಮೇ 3ರಂದು ಬಹುಸಂಖ್ಯಾತ ಮೈತೇಯಿ ಸಮುದಾಯದ ಬೇಡಿಕೆ ವಿರೋಧಿಸಿ ಕುಕಿ ಸಮುದಾಯ ಬುಡಕಟ್ಟು ಐಕ್ಯತಾ ಮೆರವಣಿಗೆ ನಡೆಸಿತ್ತು. ಈ ವೇಳೆ, ಎರಡೂ ಸಮುದಾಯಗಳ ನಡುವೆ ಹಿಂಸಾಚಾರ ಉಂಟಾಗಿತ್ತು.