ಪ್ರಗತಿಯ ಹೊರತಾಗಿಯೂ, ಪ್ರಾದೇಶಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಅಸಮಾನತೆ ಹೆಚ್ಚುತ್ತಿದೆ. ಸಮಾನ ಅಭಿವೃದ್ಧಿಯನ್ನು ಖಚಿತ ಪಡಿಸಿಕೊಳ್ಳುವುದು ನೈಜ ಸವಾಲು. ವಿಕಸಿತ ಭಾರತ ಕೇವಲ ಘೋಷಣೆಯಾಗಿರಬಾರದು. ಅದು ನಮ್ಮೆಲ್ಲರಿಗೂ ಸವಾಲು ಆಗಿರಬೇಕು. ಅಸಮಾನತೆ ಅಂತರ ಕನಿಷ್ಠ ಮಟ್ಟಕ್ಕೆ ಇಳಿಯಬೇಕು. ದೇಶವು ಸಬಲೀಕರಣಗೊಂಡ ರಾಜ್ಯಗಳ ಒಕ್ಕೂಟವಾಗಿ ಒಟ್ಟಾಗಿ ಅಭಿವೃದ್ಧಿ ಆಗಬೇಕು. ಪ್ರಬಲ, ಸಮಾನ ಮತ್ತು ಸಬಲೀಕರಣಗೊಂಡ ರಾಜ್ಯಗಳಿಂದ ಮಾತ್ರ ಬಲವಾದ ಒಕ್ಕೂಟ ಹೊರಹೊಮ್ಮಲು ಸಾಧ್ಯ.– ಸಿದ್ದರಾಮಯ್ಯ, ಕರ್ನಾಟಕ ಮುಖ್ಯಮಂತ್ರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರವನ್ನು ನಿಂದಿಸುತ್ತಾ ಕೂತರೆ ಪ್ರಯೋಜನವಿಲ್ಲ. ಹದಿನಾಲ್ಕು ಬಜೆಟ್ ಮಂಡಿಸಿದ ಅವರು ನೀತಿ ಆಯೋಗದ ಸಭೆಗೆ ಗೈರು ಆಗುವುದು ಎಷ್ಟು ಸರಿ? ರಾಜಕೀಯ ಪ್ರತಿಷ್ಠೆಗೆ ರಾಜ್ಯದ ಹಿತವನ್ನು ಬಲಿಕೊಡುವುದು ತಪ್ಪು. ಸಂವಾದವೇ ಇಲ್ಲದಿದ್ದರೆ ಸಮಸ್ಯೆ ಹೇಗೆ ಬಗೆಹರಿಯುತ್ತದೆ. ರಾಷ್ಟ್ರದ ನೀತಿ ನಿರೂಪಣೆ, ಅಭಿವೃದ್ಧಿಗೆ ಸಂಬಂಧಿಸಿ ಪ್ರಧಾನಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಅವರು ತಪ್ಪದೇ ಭಾಗವಹಿಸಬೇಕಿತ್ತು. ಮುಂದಾದರೂ ರಾಜ್ಯದ ಹಿತದೃಷ್ಟಿಯಿಂದ ಮುಖ್ಯಮಂತ್ರಿಯವರು ಇಂತಹ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು ಎಂಬುದು ನನ್ನ ಸಲಹೆ. ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಿಗೆ ಕೆಲಸ ಮಾಡಬೇಕು. ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಖಂಡಿತಾ ಬೇಡ.– ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ
ಕೇಂದ್ರದ ತೆರಿಗೆಗಳಲ್ಲಿ ರಾಜ್ಯದ ಪಾಲನ್ನು ಶೇ 50ಕ್ಕೆ ಏರಿಸಬೇಕು. 15ನೇ ಹಣಕಾಸು ಆಯೋಗವು ರಾಜ್ಯಗಳಿಗೆ ಶೇ 42ರಷ್ಟು ಪಾಲು ನಿಗದಿಪಡಿಸಲಾಗಿದೆ. ಆದರೆ, ರಾಜ್ಯ ಪ್ರಸ್ತುತ ಕೇವಲ ಶೇ 33.16 ಪಡೆಯುತ್ತಿದೆ.– ಎಂ.ಕೆ.ಸ್ಟಾಲಿನ್, ತಮಿಳುನಾಡು ಮುಖ್ಯಮಂತ್ರಿ
‘ವಿಕಸಿತ ಭಾರತ–2047’ ಗುರಿ ಮುಟ್ಟಲು ವೇಗವಾಗಿ ಕೆಲಸ ಮಾಡಲು ನೀತಿ ಆಯೋಗದಲ್ಲಿ ಜಿಡಿಪಿ ಬೆಳವಣಿಗೆ, ಜನಸಂಖ್ಯಾ ನಿಯಂತ್ರಣ ಹಾಗೂ ಕೃತಕ ಬುದ್ಧಿಮತ್ತೆ ಬಳಕೆಗೆ ಮೂರು ಉಪ ಗುಂಪುಗಳನ್ನು ರಚಿಸಬೇಕು.– ಎನ್.ಚಂದ್ರಬಾಬು ನಾಯ್ಡು, ಆಂಧ್ರ ಪ್ರದೇಶದ ಮುಖ್ಯಮಂತ್ರಿ
ತಮ್ಮ ಸರ್ಕಾರವು 2047ರ ವೇಳೆಗೆ ದೇಶದ ಜಿಡಿಪಿಗೆ ಶೇಕಡಾ 8 ರಷ್ಟು ಕೊಡುಗೆ ನೀಡುವ ಗುರಿ ಹೊಂದಿದೆ. ಆರು ಪ್ರಮುಖ ಮಹಾನಗರಗಳನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಕಾರ್ಯಪಡೆ ರಚಿಸಬೇಕು.– ರೇವಂತ್ ರೆಡ್ಡಿ, ತೆಲಂಗಾಣ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.