ಬೆಂಗಳೂರು: ಉಡುಪಿ ಜಿಲ್ಲೆ ಬೈಂದೂರು ಕ್ಷೇತ್ರಕ್ಕೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ವಂಚಿಸಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಆರೋಪಿಗಳನ್ನು ನಗರಕ್ಕೆ ಬುಧವಾರ ಮಧ್ಯಾಹ್ನ ಕರೆ ತರಲಾಯಿತು.
ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬಂಧಿಸಲಾಗಿತ್ತು. ಸಿಸಿಬಿ ಕಚೇರಿಗೆ ಕರೆತಂದ ಪೊಲೀಸರು ಕೆಲವು ಮಾಹಿತಿ ಪಡೆದುಕೊಂಡು ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. 1ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಚೈತ್ರಾ ಕುಂದಾಪುರ, ಗಗನ್, ಧನರಾಜ್, ಶ್ರೀಕಾಂತ್, ಪ್ರಜ್ವಲ್, ರಮೇಶ್ರನ್ನು ಸಿಸಿಬಿ ಪೊಲೀಸರು ಹಾಜರು ಪಡಿಸಲಿದ್ದಾರೆ.
ಎಸಿಪಿ ರೀಣಾ ಸುವರ್ಣ ಅವರ ನೇತೃತ್ವದಲ್ಲಿ ಪ್ರತ್ಯೇಕವಾಗಿ ಆರು ಆರೋಪಿಗಳ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ಹೆಚ್ಚಿನ ವಿಚಾರಣೆಗೆ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.