ಬೆಂಗಳೂರು: ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆಯನ್ನು ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.
ಸಚಿವರ ಹೇಳಿಕೆ ಕುರಿತು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು’ ಎಂದು ಹೇಳಿದ್ದಾರೆ.
‘ನಾನು ಕೃಷಿ ಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು’ ಎಂದು ಎಚ್ಡಿಕೆ ಆಗ್ರಹಿಸಿದ್ದಾರೆ.