ನವದೆಹಲಿ: ದೆಹಲಿಯ ದಾಬ್ರಿ ಪ್ರದೇಶದಲ್ಲಿ ದುಷ್ಕರ್ಮಿಗಳಿಂದ ಥಳಿತಕ್ಕೊಳಗಾಗಿದ್ದ 20 ವರ್ಷದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಏ.23 ರಂದು ಯುವಕನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮನಸೋ ಇಚ್ಛೆ ಹಲ್ಲೆ ನಡೆಸಿತ್ತು. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತ ಯುವಕನನ್ನು ಕೃಷ್ಣ ಎಂದು ಗುರುತಿಸಲಾಗಿದೆ. ಆತನನ್ನು ದುಷ್ಕರ್ಮಿಗಳ ತಂಡ ಬೆಲ್ಟ್ ಮತ್ತು ದೊಣ್ಣೆಗಳಿಂದ ಥಳಿಸುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
ಹೋಳಿ ಹಬ್ಬದಂದು ಕೃಷ್ಣ, ಸ್ನೇಹಿತ ಸೂರಜ್ ಮಧ್ಯೆ ಜಗಳವಾಗಿತ್ತು. ಏ. 23 ರಂದು ಸೂರಜ್ ಸಹಚರರ ಜೊತೆಗೂಡಿ ಕೃಷ್ಣನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದರು.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.