ಅಗರ್ತಲ: ಪಶ್ಚಿಮ ತ್ರಿಪುರಾದ ಖುಮುಲ್ವಾಂಗ್ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ರ್ಯಾಲಿಗೆ ತೆರಳುತ್ತಿದ್ದ ಪಕ್ಷದ ಕಾರ್ಯಕರ್ತರ ಮೇಲೆ ಮಂಗಳವಾರ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಕನಿಷ್ಠ 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳ ಪೈಕಿ 25 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತ್ರಿಪುರಾ ಮುಖ್ಯಮಂತ್ರಿ ಮಣಿಕ್ ಶಾ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದ್ದಾರೆ.
ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಪಕ್ಷದ ಪರ ಪ್ರಚಾರ ನಡೆಸಲು ಹಾಗೂ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ತಯಾರಿಯಾಗಿ ನಡ್ಡಾ ರ್ಯಾಲಿ ಹಮ್ಮಿಕೊಂಡಿದ್ದರು.
‘ಪಶ್ಚಿಮ ತ್ರಿಪುರಾ ಮತ್ತು ಸೆಪಾಹಿಜಾಲ ಜಿಲ್ಲೆಗಳಲ್ಲಿ ನಡೆದ 7 ದಾಳಿಗಳಲ್ಲಿ 40 ಮಂದಿ ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಅವರೆಲ್ಲ ನಡ್ಡಾ ರ್ಯಾಲಿಗೆ ತೆರಳುತ್ತಿದ್ದರು’ ಎಂದು ಐಜಿ (ಕಾನೂನು ಮತ್ತು ಸುವ್ಯವಸ್ಥೆ) ಅರಿಂದಮ್ ನಾಥ್ ತಿಳಿಸಿದ್ದಾರೆ.