ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ ಆರೋಪ ಇಬ್ಬರು ಬುಡಕಟ್ಟು ವ್ಯಕ್ತಿಗಳ ಹತ್ಯೆ: 9 ಮಂದಿ ಬಂಧನ

Last Updated 4 ಮೇ 2022, 6:47 IST
ಅಕ್ಷರ ಗಾತ್ರ

ಭೋಪಾಲ್‌: ಮಧ್ಯಪ್ರದೇಶದ ಸಿವನಿ ಜಿಲ್ಲೆಯಲ್ಲಿ ಗೋಹತ್ಯೆ ಮಾಡಿರುವ ಆರೋಪದಲ್ಲಿ ಇಬ್ಬರು ಬುಡಕಟ್ಟು ವ್ಯಕ್ತಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂಬತ್ತು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕುರೈ ಪೊಲೀಸ್ ಠಾಣಾ ವ್ಯಾಪ್ತಿಯ ಸಿಮಾರಿಯಾ ಗ್ರಾಮದಲ್ಲಿ ಗೋಹತ್ಯೆ ಆರೋಪದ ಮೇಲೆ 15ರಿಂದ 20 ಜನರಿದ್ದ ಗುಂಪು ಥಳಿಸಿದ ನಂತರ ಮಂಗಳವಾರ ಬೆಳಗ್ಗೆ ಇಬ್ಬರು ಬುಡಕಟ್ಟು ವ್ಯಕ್ತಿಗಳು ಮೃತಪಟ್ಟಿದ್ದರು.

ದಾಳಿ ನಡೆಸಿದವರು ಬಜರಂಗ ದಳದ ಕಾರ್ಯಕರ್ತರು ಎಂದು ವಿರೋಧ ಪಕ್ಷ ಕಾಂಗ್ರೆಸ್‌ ಆರೋಪಿಸಿದೆ.

ಘಟನೆಯ ನಂತರ, ಪ್ರತಿಪಕ್ಷ ಕಾಂಗ್ರೆಸ್ ಶಾಸಕ ಅರ್ಜುನ್ ಸಿಂಗ್ ಕಕೋಡಿಯಾ ನೇತೃತ್ವದ ಗುಂಪು ಮಂಗಳವಾರ ಜಬಲ್‌ಪುರ-ನಾಗಪುರ ಹೆದ್ದಾರಿಯಲ್ಲಿ 6 ಗಂಟೆಗಳ ಕಾಲ ಪ್ರತಿಭಟನೆ ನಡೆಸಿತು. ಮೃತರ ಕುಟುಂಬಕ್ಕೆ ಉದ್ಯೋಗ ಮತ್ತು ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿತು. ಜಿಲ್ಲಾಡಳಿತದ ಭರವಸೆ ಮೇರೆಗೆ ಪ್ರತಿಭಟನೆ ಅಂತ್ಯಗೊಳಿಸಿದರು.

ಆರೋಪಿಗಳು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಥಳೀಯ ಸಂಸದ ಮತ್ತು ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಾಸ್ತೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಸುವಿನ ಮಾಂಸದ ವಿಷಯದಲ್ಲಿ ವಿವಾದ ಆರಂಭವಾಗಿದ್ದು, ಘಟನೆಯಲ್ಲಿ ಯಾವುದೇ ಸಂಘಟನೆ ಭಾಗಿಯಾಗಿದೆ ಎಂದು ಹೇಳುವುದು ಸರಿಯಲ್ಲ. ತನಿಖೆಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದು ಅವರು ಹೇಳಿದರು.

ಘಟನೆಯಲ್ಲಿ ಗಾಯಗೊಂಡಿರುವ ಬ್ರಜೇಶ್ ಬಟ್ಟಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿರುವ ಪ್ರಕಾರ, ಮಂಗಳವಾರ ಮುಂಜಾನೆ 2.30 ಯಿಂದ 3 ಗಂಟೆ ಸುಮಾರಿಗೆ 15-20 ಜನರ ಗುಂಪು ಸಾಗರ್ ಗ್ರಾಮದ ನಿವಾಸಿ ಸಂಪತ್‌ಲಾಲ್ ಬಟ್ಟಿ ಮತ್ತು ಸಿಮಾರಿಯ ನಿವಾಸಿ ಧನ್ಸೆ ಇನವಾಟಿ ಅವರನ್ನು ಗೋಹತ್ಯೆ ಆರೋಪದ ಮೇಲೆ ಕೋಲುಗಳಿಂದ ಥಳಿಸಿದೆ. ಈ ವೇಳೆ ಸ್ಥಳಕ್ಕೆ ಬಂದ ನನ್ನನ್ನೂ(ಬ್ರಜೇಶ್ ಬಟ್ಟಿ) ಅವರನ್ನೂ ಥಳಿಸಲಾಯಿತು. ಇನವಾಟಿ ಮತ್ತು ಸಂಪತ್‌ಲಾಲ್ ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT