ನವದೆಹಲಿ: ರಾಜಸ್ಥಾನ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಕನಿಷ್ಠ 14 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ರಾಜಸ್ಥಾನದ ಚಿತ್ತೋರ್ಗಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಜೀಪ್ ಹಾಗೂ ಟ್ರಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ 10 ಮಂದಿ ಸಾವಿಗೀಡಾದರು.
ಶನಿವಾರದಂದೇ ತಮಿಳುನಾಡಿನ ಧರ್ಮಪುರಿಯಲ್ಲಿ ಸಿಮೆಂಟ್ನ ಭಾರಿ ಹೊರೆಯೊಂದಿಗೆ ಸಾಗುತ್ತಿದ್ದ ಟ್ರಕ್, ಸುಮಾರು 14 ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ತೊಪ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ನಾಪತ್ತೆಯಾಗಿರುವ ಚಾಲಕನಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.
ರಾಜಸ್ಥಾನದಲ್ಲಿ ನಿಕುಂಬ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಧ್ಯ ಪ್ರದೇಶದ ರಾಟ್ಲಾಂ ಜಿಲ್ಲೆ ಮೂಲದ 16 ಮಂದಿ ಜೀಪ್ನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಈ ಎರಡು ಪ್ರತ್ಯೇಕ ಅಪಘಾತಗಳನ್ನು ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂತ್ರಸ್ಥ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡವರು ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿದ್ದಾರೆ.