ನಂದಿಗ್ರಾಮ: ಏಪ್ರಿಲ್ 1ರಂದು ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುರ್ಬಾ ಮೇದಿನಿಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಶನಿವಾರ ಘರ್ಷಣೆ ಸಂಭವಿಸಿದ್ದು, ಕನಿಷ್ಠ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಇಲ್ಲಿನ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆದಾಗ್ಯೂ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯ ಚುನಾವಣಾ ಏಜೆಂಟ್ ಶೇಖ್ ಸುಫಿಯಾನ್, ಬಿಜೆಪಿಯಿಂದ ನೇಮಕಗೊಂಡ ಗೂಂಡಾಗಳು ರಾಜ್ಯದ ಆಡಳಿತ ಪಕ್ಷದ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಇದನ್ನು ಬಿಜೆಪಿ ನಿರಾಕರಿಸಿದೆ.
ದಾಳಿಯಲ್ಲಿ ಗಾಯಗೊಂಡ ಮೂವರೂ ಟಿಎಂಸಿಯ ಕಾರ್ಯಕರ್ತರನ್ನು ಕೋಲ್ಕತ್ತಾದ ಎಸ್ಎಸ್ಕೆಎಂ ಆಸ್ಪತ್ರೆಗೆ ಸಾಗಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸುಫಿಯಾನ್ ತಿಳಿಸಿದ್ದಾರೆ.
ಕಳೆದ 15 ದಿನಗಳಲ್ಲಿ ನಂದಿಗ್ರಾಮದಲ್ಲಿ ಬಿಜೆಪಿ ಗೂಂಡಾಗಳು 'ಭಯೋತ್ಪಾದನೆಯ ಆಳ್ವಿಕೆಯನ್ನು ಬಿಚ್ಚಿಟ್ಟಿದ್ದಾರೆ' ಎಂದು ಆರೋಪಿಸಿದ ಅವರು, ಈ ಗೂಂಡಾಗಳು ಟಿಎಂಸಿ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಅವರ ಮೇಲೆ ದಾಳಿ ಮಾಡುತ್ತಿದ್ದಾರೆ ಮತ್ತು ಚಿನ್ನದ ಸರಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಆದರೆ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ' ಎಂದು ದೂರಿದ್ದಾರೆ.
ಸುಫಿಯಾನ್ ಅವರ ಆರೋಪವನ್ನು ನಿರಾಕರಿಸಿದ ಹಿರಿಯ ಪೊಲೀಸ್ ಅಧಿಕಾರಿ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಈ ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
'ಟಿಎಂಸಿ ಕಾರ್ಯಕರ್ತರು ಕ್ಷೇತ್ರದಲ್ಲಿ ಶಾಂತಿಯನ್ನು ಭಂಗಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಯಾವುದೇ ಕಾರ್ಯಕರ್ತರು ಟಿಎಂಸಿ ಕಾರ್ಯಕರ್ತರ ಮೇಲೆ ಯಾವುದೇ ದಾಳಿಯಲ್ಲಿ ಭಾಗಿಯಾಗಿಲ್ಲ. ಇದಕ್ಕೆ ತದ್ವಿರುದ್ಧವಾಗಿ, ಆಡಳಿತ ಪಕ್ಷದ ಸದಸ್ಯರು ಸುವೇಂದು ಅಧಿಕಾರಿಯ ರ್ಯಾಲಿಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಆದರೆ ಚಿಕಿತ್ಸೆ ಪಡೆಯುತ್ತಿರುವ ಟಿಎಂಸಿ ಕಾರ್ಯಕರ್ತರು ಹಿಂಸಾಚಾರದಲ್ಲಿ ಗಾಯಗೊಂಡಿರಬಹುದು' ಎಂದು ಕೇಸರಿ ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.