ಲಖನೌ: ಏಕರೂಪ ನಾಗರಿಕ ಸಂಹಿತೆ ವಿರುದ್ಧ ಜನಾಭಿಪ್ರಾಯ ರೂಪಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಕ್ರಮವಹಿಸಲಿದೆ ಎಂದು ಮಂಡಳಿಯ ಸದಸ್ಯ ಜಫರ್ಯಾಬ್ ಜಿಲಾನಿ ಹೇಳಿದ್ದಾರೆ.
ಸುದ್ದಿ ಸಂಸ್ಥೆ ಜೊತೆಗೆ ಮಾತನಾಡಿದ ಅವರು, ಈ ಕುರಿತು ಅ. 11 ಮತ್ತು 13ರಂದು ನಡೆದ ಕಾರ್ಯನಿರ್ವಾಹಕ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಬಾಬರಿ ಮಸೀದಿ ನೆಲಸಮ ಪ್ರಕರಣ ಕುರಿತು ಚರ್ಚಿಸಲಾಯಿತು ಎಂದು ಅವರು ಹೇಳಿದರು.
ಬಿಜೆಪಿಯ ಕಾರ್ಯಸೂಚಿಯಲ್ಲಿ ಪ್ರಸ್ತುತ ಏಕರೂಪ ನಾಗರಿಕ ಸಂಹಿತೆ ವಿಷಯವಷ್ಟೇ ಉಳಿದುಕೊಂಡಿದ್ದು, ಆ ನಿಟ್ಟಿನಲ್ಲಿ ಅದು ಹೆಜ್ಜೆ ಇಡಬಹುದು ಎಂಬ ಅಭಿಪ್ರಾಯ ಮಂಡಳಿಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಅವರು ತಿಳಿಸಿದರು.
ಏಕರೂಪ ನಾಗರಿಕ ಸಂಹಿತೆಯಿಂದ ಬಾಧಿತರಾಗುವ ವಿವಿಧ ಸ್ತರದ ಸಮುದಾಯದ ಮುಖಂಡರ ಜೊತೆಗೂ ಮಂಡಳಿಯು ಚರ್ಚಿಸಲಿದೆ. ಭಾರತ ವಿವಿಧ ಸಂಸ್ಕೃತಿ ಮತ್ತು ನಾಗರಿಕತೆಯ ನೆಲೆವೀಡು. ಹೀಗಾಗಿ, ಏಕರೂಪ ನಾಗರಿಕ ಸಂಹಿತೆಯ ಜಾರಿ ಸಮರ್ಥನೀಯವಲ್ಲ ಎಂದು ಅವರು ಪ್ರತಿಪಾದಿಸಿದರು.