ನವದೆಹಲಿ: ನ್ಯೂಯಾರ್ಕ್ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕನೊಬ್ಬ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ಶನಿವಾರ ಕ್ಷಮೆಯಾಚಿಸಿದ್ದಾರೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ವಿಲ್ಸನ್, ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಸಹ ಪ್ರಯಾಣಿಕರ ಆಕ್ಷೇಪಾರ್ಹ ನಡೆಯಿಂದ ಪ್ರಯಾಣಿಕರಿಗೆ ಸಮಸ್ಯೆ ಉಂಟಾದ ಪ್ರಕರಣವನ್ನು ಏರ್ ಇಂಡಿಯಾ ಆದ್ಯತೆಯ ಮೇರೆಗೆ ಉತ್ತಮ ರೀತಿಯಲ್ಲಿ ನಿರ್ವಹಿಸಬಹುದಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ.
ಈ ಕೆಟ್ಟ ಅನುಭವದ ಬಗ್ಗೆ ವಿಷಾಧಿಸುತ್ತೇವೆ ಮತ್ತು ನೋವುಂಟಾಗಿದೆ. ಪ್ರಯಾಣದ ಸಂದರ್ಭದಲ್ಲಿಯೇ ಮತ್ತು ನಂತರವೂ ಪ್ರಕರಣವನ್ನು ಸರಿಯಾಗಿ ನಿಭಾಯಿಸಲು ಅವಕಾಶವಿತ್ತು. ಸದ್ಯ ಕ್ರಮ ಕೈಗೊಳ್ಳಲು ಏರ್ ಇಂಡಿಯಾ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಏನಿದು ಘಟನೆ? 2022ರ ನವೆಂಬರ್ 26 ರಂದು, ಮುಂಬೈ ಮೂಲದ ಉದ್ಯಮಿ ಶಂಕರ್ ಮಿಶ್ರಾ ಎಂಬಾತ ಕುಡಿದ ಮತ್ತಿನಲ್ಲಿ ಮಹಿಳೆಯ ಮೇಲೆ ಮೂತ್ರ ಮಾಡಿದ್ದ. ವಿಮಾನ ಲ್ಯಾಂಡ್ ಆದ ನಂತರವೂ ಮಿಶ್ರಾ ವಿರುದ್ಧ ಯಾವುದೇ ಕ್ರಮ ಜರುಗಿಸಿರಲಿಲ್ಲ.
ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ವಿಮಾನದ ಬ್ಯುಸಿನೆಸ್ ಕ್ಲಾಸ್ನಲ್ಲಿ ಈ ಘಟನೆ ನಡೆದಿತ್ತು.