ಕೋಲ್ಕತ್ತ: ಮಾರ್ಚ್ 17ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭೇಟಿಯಾಗಲಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ವರಿಷ್ಠೆಯ ಜೊತೆ ಅವರ ನಿವಾಸದಲ್ಲಿ ಸಮಕಾಲೀನ ರಾಜಕಾರಣ ಹಾಗೂ ವಿಧಾನಸಭೆ ಚುನಾವಣೆಗಳ ಬಗ್ಗೆ ಅಖಿಲೇಶ್ ಚರ್ಚೆ ನಡೆಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಉಪಾಧ್ಯಕ್ಷ ಕಿರಣ್ಮಯಿ ನಂದಾ ತಿಳಿಸಿದ್ದಾರೆ.
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಕೂಡ ಭಾಗವಹಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿಪಕ್ಷಗಳನ್ನು ಗುರಿಯಾಗಿಸಿ ಕೇಂದ್ರ ತನಿಖಾ ಸಂಸ್ಥೆಗಳ ದಾಳಿಯ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.
2021ರಲ್ಲಿ ನಡೆದ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಅವರನ್ನು ಅಖಿಲೇಶ್ ಬೆಂಬಲಿಸಿದ್ದರು. ಬಳಿಕ 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್ ಪರ ಮಮತಾ ಪ್ರಚಾರ ನಡೆಸಿದ್ದರು.
11 ವರ್ಷಗಳ ಬಳಿಕ ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಕೋಲ್ಕತ್ತದಲ್ಲಿ ಮಾರ್ಚ್ 18ರಿಂದ ನಡೆಯಲಿದೆ.