ದೇವರಿಯಾ (ಉತ್ತರ ಪ್ರದೇಶ): ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಭಯೋತ್ಪಾದಕರನ್ನು ರಕ್ಷಿಸುವುದಕ್ಕಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಯೇ ವಿನಃ ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಟೀಕಿಸಿದ್ದಾರೆ.
ಉತ್ತರ ಪ್ರದೇಶದ ದೇವರಿಯಾದ ರುದ್ರಾಪುರದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಲು ಅಖಿಲೇಶ್ ಯಾದವ್ ಅಧಿಕಾರದಲ್ಲಿದ್ದಾಗ ಬಯಸಿದ್ದರು ಎಂದು ಆರೋಪಿಸಿದ್ದಾರೆ.
‘ಉಳಿದವರೆಲ್ಲ ಸಂವಿಧಾನವನ್ನು ರಕ್ಷಿಸಲು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ಅಖಿಲೇಶ್ ಅವರು ಭಯೋತ್ಪಾದಕರನ್ನು ರಕ್ಷಿಸಲು ಪ್ರತಿಜ್ಞಾವಿಧಿ ಸ್ವೀಕರಿಸುತ್ತಾರೆ’ ಎಂದು ಅವರು ಹೇಳಿದ್ದಾರೆ.
‘ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ 38 ಮಂದಿ ಅಪರಾಧಿಗಳಿಗೆ ಶುಕ್ರವಾರ ಮರಣದಂಡನೆ ವಿಧಿಸಲಾಗಿತ್ತು. ಆ ಪೈಕಿ ಒಬ್ಬನಾದ ಮೊಹಮ್ಮದ್ ಸೈಫ್ನ ತಂದೆ ಶದಾಬ್ ಅಹ್ಮದ್ ಸಮಾಜವಾದಿ ಪಕ್ಷದ ಕಾರ್ಯಕರ್ತ. ಅಖಿಲೇಶ್ ಜತೆ ಆಪ್ತರು’ ಎಂದು ನಡ್ಡಾ ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧವೂ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.