ಶ್ರೀನಗರ: ಮಧ್ಯ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಬಾಲ್ಟಾಲ್ ಮಾರ್ಗದಲ್ಲಿನ ಎರಡು ಬೇಸ್ ಕ್ಯಾಂಪ್ಗಳಿಂದ ವಾರ್ಷಿಕ ಅಮರನಾಥ ಯಾತ್ರೆಯು ಮಂಗಳವಾರ ಪುನರಾರಂಭವಾಗಿದೆ.
ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ 3,880 ಮೀಟರ್ ಎತ್ತರದ ಅಮರನಾಥ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಲು ಮಂಗಳವಾರ ಮುಂಜಾನೆ ಬಾಲ್ಟಾಲ್ನ ಬೇಸ್ ಕ್ಯಾಂಪ್ಗಳಿಂದ 7 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳ ಹೊಸ ತಂಡವು ಹೊರಟಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರಿ ಮಳೆಯಿಂದಾಗಿ ಉಂಟಾಗಿದ್ದ ಭೂಕುಸಿತದಲ್ಲಿ 16 ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದರು. ಹಾಗಾಗಿ, ಯಾತ್ರೆಯನ್ನು ನಾಲ್ಕು ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಮಳೆಯಿಂದಾಗಿ ಹಾನಿಗೀಡಾದ ರಸ್ತೆಗಳು ಮತ್ತು ಭೂಕುಸಿತ ಉಂಟಾದ ಮಾರ್ಗಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.