ಕೊಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿರುವ ಮಾನನಷ್ಟ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಫೆಬ್ರವರಿ 22 ರಂದು ಬೆಳಗ್ಗೆ 10 ಗಂಟೆಗೆ ಅಮಿತ್ ಶಾ ಅವರು ಖುದ್ದಾಗಿ ಅಥವಾ ವಕೀಲರ ಮೂಲಕ ಕೋರ್ಟ್ ಎದುರು ಹಾಜರಾಗಬೇಕು ಎಂದು ಬಿಧಾನ್ನಗರದಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸೂಚಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 500ರ ಅಡಿಯಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣದಲ್ಲಿ ಉತ್ತರಿಸಲು ಖುದ್ದು ಅಥವಾ ವಕೀಲರ ಮೂಲಕ ಅಮಿತ್ ಶಾ ಹಾಜರಾತಿ ಅಗತ್ಯ ಎಂದು ನ್ಯಾಯಾಧೀಶರು ಹೇಳಿದ್ದಾರೆ.
2018ರ ಆಗಸ್ಟ್ 11ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿಯ ಸಮಾವೇಶದಲ್ಲಿ ಅಮಿತ್ ಶಾ ಅವರು ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ವಕೀಲ ಸಂಜಯ್ ಬಸು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.