ಜೌನಪುರ (ಉತ್ತರ ಪ್ರದೇಶ): ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರುಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಆದರೆ,ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ನಾಯಕರು ಕೇವಲ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ನಗರದಲ್ಲಿ ನಡೆದ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಶಾ, 'ಎಸ್ಪಿ ಮತ್ತು ಬಿಎಸ್ಪಿ ಬಡವರ ಬಗ್ಗೆ ಖಾಲಿ ಮಾತುಗಳನ್ನಾಡುತ್ತಿವೆ. ಆದರೆ, ಪ್ರಧಾನಿ ಮೋದಿ ಮತ್ತು ಯೋಗಿ ಆದಿತ್ಯನಾಥ ಅವರು ಬಡವರ ಕಲ್ಯಾಣಕ್ಕಾಗಿ ದುಡಿಯುತ್ತಿದ್ದಾರೆ' ಎಂದಿದ್ದಾರೆ.
ಕೇಂದ್ರ ಸಚಿವರು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ಅಖಿಲೇಶ್ಯಾದವ್ ಅವರು ಕೊರೊನಾ ಸಂದರ್ಭದಲ್ಲಿ ಕೋವಿಡ್ ಲಸಿಕೆಯನ್ನು 'ಬಿಜೆಪಿಯ ಲಸಿಕೆ' ಎಂದು ಕರೆದಿದ್ದರು. ಲಸಿಕೆ ಪಡೆದರೆ ಆರೋಗ್ಯದ ಮೇಲೆ ಪರಿಣಾಮವಾಗಲಿದೆ ಎಂದು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡಿದ್ದರು. ಆದರೆ, ಇದೀಗ ಅವರೇ (ಯಾದವ್) ಲಸಿಕೆ ಪಡೆದುಕೊಂಡಿದ್ದಾರೆ ಎಂದು ಗುಡುಗಿದ್ದಾರೆ.
403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ 6 ಹಂತಗಳ (ಫೆಬ್ರುವರಿ 10, 14,20, 23, 27 ಮತ್ತು ಮಾರ್ಚ್ 3) ಮತದಾನ ಪ್ರಕ್ರಿಯೆ ಮುಗಿದಿದೆ. ಏಳನೇ ಹಂತದ ಮತದಾನ ಮಾರ್ಚ್ 7ರಂದು ನಡೆಯಲಿದೆ.
ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ಕಳೆದ (2017ರ) ವಿಧಾನ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್ಪಿ 47, ಬಿಎಸ್ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.