ನವದೆಹಲಿ: ಅಮರಾವತಿ ಭೂ ಹಗರಣದ ಬಗ್ಗೆ ಎಸ್ಐಟಿ ತನಿಖೆಯನ್ನು ತಡೆಹಿಡಿದಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಆಂಧ್ರಪ್ರದೇಶ ಸರ್ಕಾರ ಗುರುವಾರ ಹಿಂಪಡೆದಿದೆ.
ಈ ಸಂಬಂಧ ಹೈಕೋರ್ಟ್ ಮೊರೆ ಹೋಗುವುದಾಗಿ ನ್ಯಾಯಮೂರ್ತಿ ವಿನೀತ್ ಶರಣ್ ಮತ್ತು ದಿನೇಶ್ ಮಾಹೇಶ್ವರಿ ಅವರ ಪೀಠಕ್ಕೆ ರಾಜ್ಯ ಸರ್ಕಾರವು ತಿಳಿಸಿದೆ.
‘ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಮರಾವತಿ ಭೂ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಒಪ್ಪಿಗೆಯಿದೆ’ ಎಂದು ಮಾರ್ಚ್ 5 ರಂದು ಆಂಧ್ರಪ್ರದೇಶ ಸರ್ಕಾರವು ಸುಪ್ರೀಂಕೋರ್ಟ್ಗೆ ತಿಳಿಸಿತ್ತು.
‘ಅಮರಾವತಿ ಭೂ ಹಗರಣದ ಬಗ್ಗೆ ಎಸ್ಐಟಿ ತನಿಖೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ರದ್ದುಗೊಳ್ಳಿಸಬೇಕು. ಈ ಮೂಲಕ ಹಗರಣದ ತನಿಖೆಗೆ ಅವಕಾಶ ಕಲ್ಪಿಸಬೇಕು’ ಎಂದು ಆಂಧ್ರಪ್ರದೇಶ ಸರ್ಕಾರವು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಈ ಹಗರಣದ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿ ಅವರ ಸರ್ಕಾರವು ಡಿಜಿಪಿ ನೇತೃತ್ವದ 10 ಸದಸ್ಯರ ಎಸ್ಐಟಿ ತಂಡವನ್ನು ರಚಿಸಿತ್ತು.