ನವದೆಹಲಿ: ಉತ್ತರ ಪ್ರದೇಶದಲ್ಲಿ 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ.
ಉತ್ತರ ಪ್ರದೇಶದ ರಾಜಕೀಯ ಪಕ್ಷಗಳು ಜನರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಗಾಗಿ ಉತ್ತರ ಪ್ರದೇಶದ ಜನರು ದೆಹಲಿಯತ್ತ ಏಕೆ ಮುಖ ಮಾಡಬೇಕು ಎಂದು ಪ್ರಶ್ನಿಸಿರುವ ಅವರು, ಉತ್ತರ ಪ್ರದೇಶದಲ್ಲಿಯೂ ದೆಹಲಿಯಂತೆಯೇ ಮೊಹಲ್ಲಾ ಕ್ಲಿನಿಕ್, ವಿದ್ಯುತ್, ನೀರು, ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸಬಹುದು ಎಂದು ಹೇಳಿದ್ದಾರೆ.
ಕೆಟ್ಟ ರಾಜಕಾರಣ ಮತ್ತು ಭ್ರಷ್ಟ ರಾಜಕಾರಣಿಗಳಿಂದಾಗಿ ಉತ್ತರ ಪ್ರದೇಶವು ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಹಿಂದುಳಿದಿದೆ ಎಂದು ಕೇಜ್ರಿವಾಲ್ ಟೀಕಿಸಿದ್ದಾರೆ.
ಎಎಪಿಯು ಪ್ರಾಮಾಣಿಕ ಉದ್ದೇಶಗಳನ್ನು ಹೊಂದಿದ್ದು ಆಡಳಿತವು ಸಂಪನ್ಮೂಲಗಳಿಂದ ನಿರ್ಬಂಧಿತವಾಗಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.