ಹೈದರಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿ ರಚಿಸಲು ಅಲ್ಲಿನ ಸರ್ಕಾರ ಮುಂದಾಗಿದೆ. ಇದು ಬಿಜೆಪಿಯ ಮತಗಳಿಕೆಯ ತಂತ್ರ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.
ಹಿಂದುತ್ವ ಅಜೆಂಡಾವನ್ನು ಮುಂದಿಟ್ಟುಕೊಂಡು ಚುನಾವಣೆ ಗೆಲ್ಲಲು ಬಿಜೆಪಿ ಯತ್ನಿಸುತ್ತಿದೆ. ಏಕರೂಪ ನಾಗರಿಕ ಸಂಹಿತೆ ಎನ್ನುವುದು ಐಚ್ಛಿಕವಾಗಿದೆ, ಆದರೆ ಬಿಜೆಪಿ ಅದನ್ನು ಬಲವಂತವಾಗಿ ಜಾರಿ ಮಾಡಲು ಮುಂದಾಗಿದೆ ಎಂದು ಓವೈಸಿ ಹೇಳಿದ್ದಾರೆ.
ಆದಾಯ ತೆರಿಗೆ ಮಿತಿಯ ಪ್ರಯೋಜನಗಳಿಂದ ಮುಸ್ಲಿಮರು ಮತ್ತು ಕ್ರೈಸ್ತರನ್ನು ದೂರವಿರಿಸಲಾಗುತ್ತಿದೆ. ಅದು ಹೇಗೆ ಸಮಾನತೆಯಾಗುತ್ತದೆ? ಅವರಿಗೂ ಏಕರೂಪದ ಕಾನೂನು ಅನ್ವಯವಾಗಬೇಕಲ್ಲವೇ ಎಂದು ಓವೈಸಿ ಪ್ರಶ್ನಿಸಿದ್ದಾರೆ.