ಗುವಾಹಟಿ: ಈ ವರ್ಷದ ಮಾರ್ಚ್-ಏಪ್ರಿಲ್ನಲ್ಲಿ ನಡೆಯಲುಸಾಧ್ಯತೆ ಇರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರಲಿದ್ದು, ರಾಜ್ಯದ ಜನತೆಯ ಎಲ್ಲ ನಿರೀಕ್ಷೆಗಳನ್ನು ಈಡೇರಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಶನಿವಾರ ಹೇಳಿದ್ದಾರೆ.
ಪ್ರಸ್ತುತ ವಿಧಾನಸಭೆಯ ಕೊನೆಯ ಅಧಿವೇಶನದ ಮುಕ್ತಾಯದ ದಿನದಂದು ನಡೆದ ರಾಜ್ಯಪಾಲರ ಭಾಷಣದ ಚರ್ಚೆಗೆ ಉತ್ತರಿಸಿದ ಸೋನೊವಾಲ್, ಕಳೆದ ಐದು ವರ್ಷಗಳಲ್ಲಿ ಮಾಡಿದ 'ಉತ್ತಮ ಕಾರ್ಯ'ದಿಂದಾಗಿ ಆಡಳಿತಾರೂಢ ಮೈತ್ರಿಸರ್ಕಾರವೇ ಜಯ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ರಾಜ್ಯದ ಎಲ್ಲಾ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಅಭಿವೃದ್ಧಿಗಾಗಿ ನಾವು ಕಠಿಣ ಪರಿಶ್ರಮ ವಹಿಸಿದ್ದೇವೆ ಮತ್ತು ಎಲ್ಲ ಜನರಿಗೂ ಸಮಾನವಾದ ಗೌರವವನ್ನು ನೀಡಿದ್ದೇವೆ. ನಾವು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇವೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ' ಎಂದು ಅವರು ಹೇಳಿದರು.
ಅಸ್ಸಾಂನಲ್ಲಿ ಆಡಳಿತಕ್ಕೆ ಬಂದ ಬಿಜೆಪಿ ನೇತೃತ್ವದ ಮೊದಲ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದ ಮುಖ್ಯಮಂತ್ರಿ, ಎಲ್ಲಾ ಕ್ಷೇತ್ರಗಳಲ್ಲಿನ ಸಹಕಾರಕ್ಕಾಗಿ ರಾಜ್ಯದ ಜನರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ಸೋನೊವಾಲ್ ಅವರ ಭಾಷಣದ ನಂತರ, ಸದನವು ಏಪ್ರಿಲ್ನಿಂದ ಸೆಪ್ಟೆಂಬರ್ ವರೆಗೆ ಆರು ತಿಂಗಳ ಅವಧಿಗೆ ₹ 60,784.03 ಕೋಟಿಗಳ 2021-22ರ ಬಜೆಟ್ ಅನ್ನು ಅಂಗೀಕರಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.