ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಹಾಗೂ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಆರಂಭಿಕ ಮುನ್ನಡೆ ಕಾಯ್ದುಕೊಂಡಿವೆ.
ಇದೇ ವೇಳೆ, ಬಿಜೆಪಿಯ ಗೆಲುವಿನ ಬಗ್ಗೆ ಸದಾ ಟೀಕೆ ಮಾಡುವ ಪ್ರತಿಪಕ್ಷಗಳ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಟ್ವೀಟ್ ಮೂಲಕ ಕುಹಕವಾಡಿದ್ದಾರೆ.
‘ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲ್ಲುವತ್ತ ಸಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿವೆ, ಗಣರಾಜ್ಯವನ್ನು ಕಿತ್ತೊಗೆಯಲಾಗುತ್ತಿದೆ ಇತ್ಯಾದಿ. ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಗೆಲುವಿನತ್ತ ಸಾಗುತ್ತಿದೆ. ಪರ್ಯಾಯ ಆಡಳಿತದ ಭರವಸೆ, ಆಶಾವಾದ ಮೂಡಿದೆ ಇತ್ಯಾದಿ. ಕೆಲವೊಬ್ಬರು ಸುಧಾರಿಸುವುದೇ ಇಲ್ಲ...’ ಎಂದು ಸಂತೋಷ್ ಟ್ವೀಟ್ ಮಾಡಿದ್ದಾರೆ.
BJP winning in UP: Declining democratic values, Dismantling of republic etc.
— B L Santhosh (@blsanthosh) March 10, 2022
AAP winning in Punjab: promise of alternative governance, New hope rising etc.
Kuch log sudharenge nahin ...😔😔😔
ಉತ್ತರ ಪ್ರದೇಶದಲ್ಲಿ ಬಿಜೆಪಿ ಪರವಾಗಿ ಫಲಿತಾಂಶ ಬರುವಂತೆ ಮತಯಂತ್ರಗಳನ್ನು ತಿರುಚಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ಸೂಚನೆ ಬಂದಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮಂಗಳವಾರ ಆರೋಪಿಸಿದ್ದರು. ವಾರಾಣಸಿಯಲ್ಲಿ ಇವಿಎಂಗಳನ್ನು ಸಾಗಿಸುತ್ತಿದ್ದ ಎರಡು ಟ್ರಕ್ಗಳನ್ನು ಎಸ್ಪಿ ಕಾರ್ಯಕರ್ತರು ತಡೆದು ನಿಲ್ಲಿಸಿ, ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಹರಸಾಹಸದ ನಂತರ ಟ್ರಕ್ಗಳು ಮುಂದೆ ಸಾಗಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು.
ಆದರೆ, ಚುನಾವಣೆಯಲ್ಲಿ ಬಳಸಿರುವ ಮತಯಂತ್ರಗಳನ್ನು ಸ್ಟ್ರಾಂಗ್ರೂಂನಲ್ಲಿ ಭದ್ರವಾಗಿ ಇರಿಸಲಾಗಿದೆ. ಅಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ಕಣ್ಗಾವಲು ಇದೆ. ಸ್ಟ್ರಾಂಗ್ರೂಂನಿಂದ ಯಾವುದೇ ಮತಯಂತ್ರಗಳನ್ನು ಸಾಗಿಸಿಲ್ಲ. ಟ್ರಕ್ನಲ್ಲಿ ಇರುವ ಮತಯಂತ್ರಗಳನ್ನು ಚುನಾವಣೆಯಲ್ಲಿ ಬಳಸಿಲ್ಲ. ಮತ ಎಣಿಕೆ ಸಿಬ್ಬಂದಿಗೆ ತರಬೇತಿ ನೀಡಲು ಈ ಮತಯಂತ್ರಗಳನ್ನು ಸಾಗಿಸಲಾಗುತ್ತಿತ್ತು. ರಾಜಕೀಯ ಪಕ್ಷಗಳು ಮಾಡಿರುವ ಆರೋಪದಲ್ಲಿ ಹುರುಳಿಲ್ಲ’ ಎಂದು ವಾರಾಣಸಿ ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ಸ್ಪಷ್ಟನೆ ನೀಡಿದ್ದರು.
ಈ ಮಧ್ಯೆ,ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆಯ ಆರಂಭಿಕ ಟ್ರೆಂಡ್ ಗಮನಿಸಿದರೆನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿರುವುದು ಗೊತ್ತಾಗುತ್ತದೆ.ಇದು ಕುಟುಂಬ ರಾಜಕಾರಣವನ್ನು ತಿರಸ್ಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ, ಮತದಾರರು ಉತ್ತಮವಾಗಿ ಸ್ಪಂದಿಸಿರುವುದನ್ನುತೋರಿಸುತ್ತದೆ ಎಂದು ಬಿಜೆಪಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.