ಲಖನೌ: ಸಿಬಿಐ ವಿಶೇಷ ನ್ಯಾಯಾಲಯವು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಎಲ್ಲ ಆರೋಪಿಗಳು ದೋಷಮುಕ್ತ ಎಂದು ಹೇಳಿದೆ.
ವಿಶೇಷ ನ್ಯಾಯಾಲಯದ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಕೆ.ಯಾದವ್ ಅವರು ತೀರ್ಪು ಪ್ರಕಟಿಸಿದರು. ಅಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿದಂತೆ ಪ್ರಕರಣದ ಎಲ್ಲ 32 ಆರೋಪಿಗಳೂ ನಿರ್ದೋಷಿಗಳು ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.
1992ರಲ್ಲಿ ನಡೆದ ಮಸೀದಿ ಧ್ವಂಸವು ಪೂರ್ವ ನಿಯೋಜಿತವಾಗಿರಲಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರವಿದ್ದ ನಿವೇಶನದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದ ‘ಕರಸೇವಕರು’ 1992ರ ಡಿಸೆಂಬರ್ 6ರಂದು, ಮಸೀದಿಯನ್ನು ಧ್ವಂಸ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಲಾಗಿದೆ.
BJP and VHP top leaders acquitted from the the Babri Masjid demolition case. #BabriMasjid #BabriMasjidDemolition #BabriVerdict pic.twitter.com/Aq6zZjcdNV
— Bar & Bench (@barandbench) September 30, 2020
ಬಾಬರಿ ಮಸೀದಿ ಪ್ರಕರಣಕ್ಕೆ ಸಂಬಂಧ ಇಲ್ಲದ ಯಾರನ್ನೂ ಕೋರ್ಟ್ನೊಳಗೆ ಪ್ರವೇಶಿಸಿದಂತೆ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಮತ್ತಿತರರು ಆರೋಪಿಗಳಾಗಿದ್ದಾರೆ. ತೀರ್ಪು ಪ್ರಕಟವಾಗುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಯಾದವ್ ಸೆ.16ರಂದು ನಿರ್ದೇಶಿಸಿದ್ದರು.
ವಯಸ್ಸು ಮತ್ತು ಕೋವಿಡ್ ನಿರ್ಬಂಧಗಳಿಂದಾಗಿ ಅಡ್ವಾಣಿ ಮತ್ತು ಜೋಶಿ ಕೋರ್ಟ್,ಸತೀಶ್ ಪ್ರಧಾನ್, ಮಹಂತ್ ನ್ರುತ್ಯ ಗೋಪಾಲ್ ದಾಸ್ ಹಾಜರಾಗಿಲ್ಲ. ಕೋವಿಡ್–19 ದೃಢಪಟ್ಟಿರುವ ಉಮಾ ಭಾರತಿ ಹಾಗೂ ಕಲ್ಯಾಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಎಲ್ಲರೂ ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ಪ್ರಕ್ರಿಯೆಯಲ್ಲಿ ಭಾಗಿಯಾದರು.
ಉಳಿದ 27 ಮಂದಿ ಆರೋಪಿಗಳು ಕೋರ್ಟ್ಗೆ ಹಾಜರಾದರು.
लखनऊ की विशेष अदालत द्वारा बाबरी मस्जिद विध्वंस केस में श्री लालकृष्ण आडवाणी, श्री कल्याण सिंह, डा. मुरली मनोहर जोशी, उमाजी समेत ३२ लोगों के किसी भी षड्यंत्र में शामिल न होने के निर्णय का मैं स्वागत करता हूँ। इस निर्णय से यह साबित हुआ है कि देर से ही सही मगर न्याय की जीत हुई है।
— Rajnath Singh (@rajnathsingh) September 30, 2020
ಕಲ್ಯಾಣ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಾಬರಿ ಮಸೀದಿ ಧ್ವಂಸ ಘಟನೆ ನಡೆದಿತ್ತು. ರಾಜಸ್ಥಾನದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರ ಅವಧಿ ಕಳೆದ ಸೆಪ್ಟೆಂಬರ್ನಲ್ಲಿ ಪೂರ್ಣಗೊಂಡಿತ್ತು. ಇದಾದ ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಕೂಡಾ ಪ್ರಕರಣದ ಆರೋಪಿಯಾಗಿದ್ದಾರೆ.
ವಿಶೇಷ ನ್ಯಾಯಾಲಯದ ಮುಂದೆ 351 ಸಾಕ್ಷಿಗಳನ್ನು ಹಾಗೂ 600 ದಾಖಲೆಗಳನ್ನು ಸಿಬಿಐ ಸಲ್ಲಿಸಿದ್ದು, 49 ಜನರ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿತ್ತು. ವಿಚಾರಣೆಯ ಸುದೀರ್ಘ ಅವಧಿಯಲ್ಲಿ ಆರೋಪಿಗಳ ಪೈಕಿ 17 ಜನರು ಮೃತಪಟ್ಟಿದ್ದಾರೆ.
‘ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಪಿತೂರಿ ನಡೆಸಿ ‘ಕರಸೇವಕ’ರಿಗೆ ಪ್ರಚೋದಿಸಿದ್ದರು’ ಎಂದು ಸಿಬಿಐ ವಾದ ಮಂಡಿಸಿತ್ತು. ಈ ಆರೋಪವನ್ನು ತಳ್ಳಿ ಹಾಕಿದ್ದ ಆರೋಪಿಗಳು, ತಮ್ಮ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯಗಳಿಲ್ಲ. ತಮ್ಮ ವಿರುದ್ಧದ ದೋಷಾರೋಪಣೆ ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರದ ರಾಜಕೀಯ ಒಳಸಂಚು ಎಂದು ಪ್ರತಿವಾದ ಮಂಡಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ ಮತ್ತು ರಾಯಬರೇಲಿಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಮೊದಲ ದೂರಿನಲ್ಲಿ ಕರಸೇವಕರ ವಿರುದ್ಧ ಹಾಗೂ ಮತ್ತೊಂದರಲ್ಲಿ ಅಡ್ವಾಣಿ, ಜೋಶಿ ಹೀಗೆ ಪ್ರಮುಖ ನಾಯಕರ ವಿರುದ್ಧ ದೂರು ದಾಖಲಾಗಿತ್ತು. ಈ ಎರಡೂ ದೂರುಗಳನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸುವಂತೆ 2017ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಬಿಜೆಪಿ ನಾಯಕರ ವಿರುದ್ಧದ ಆರೋಪ ಕೈಬಿಡುವಂತೆ 2010ರಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನೂ ಸುಪ್ರೀಂ ಕೋರ್ಟ್ ಅಂದು ರದ್ದುಪಡಿಸಿತ್ತು.
ಪರ್ಯಾಯ ಭೂಮಿ: ಕಳೆದ ವರ್ಷ ಐತಿಹಾಸಿಕ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಅಯೋಧ್ಯೆಯಲ್ಲಿನ ಈ ವಿವಾದಾತ್ಮಕ ನಿವೇಶನವನ್ನು ರಾಮ ಮಂದಿರ ನಿರ್ಮಾಣಕ್ಕೆ ಗೊತ್ತುಪಡಿಸಿತ್ತು. ಜೊತೆಗೆ ಮಸೀದಿ ಧ್ವಂಸವನ್ನು ಕಾನೂನು ಉಲ್ಲಂಘನೆ ಎಂದು ಹೇಳಿತ್ತು. ವಿವಾದಾತ್ಮಕ ನಿವೇಶನದ ಬದಲಾಗಿ, ಅಯೋಧ್ಯೆ ನಗರಲ್ಲೇ ಮಸೀದಿ ನಿರ್ಮಾಣಕ್ಕೆ ಐದು ಎಕರೆ ನಿವೇಶನ ನೀಡಬೇಕು ಎಂದು ಆದೇಶಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.