ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಬಂದ್ಗೆ ಜನರು ಬೆಂಬಲ ಸೂಚಿಸಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಪರವಾಗಿದೆ. ಪ್ರಧಾನಿ ಮೋದಿ ಅವರು ರೈತ ವಿರೋಧಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿರುವ ವಾಡಿಗೋಡ್ರಿ ಹಳ್ಳಿಯ ರೈತರು ತಾವು ಕರೆದ ಹಾಲನ್ನು ಮಂಗಳವಾರ ಸುತ್ತಮುತ್ತಲಿನ ಹಳ್ಳಿಗರಿಗೆ ಉಚಿತವಾಗಿ ವಿತರಿಸುವ ಮೂಲಕ ನೂತನ ಕೃಷಿ ಕಾಯ್ದೆಗಳ ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ‘ಭಾರತ್ ಬಂದ್‘ಗೆ ಬೆಂಬಲ ವ್ಯಕ್ತಪಡಿಸಿದರು.
ಕೃಷಿ ಸುಧಾರಣಾ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಗಳು ನೀಡಿರುವ ‘ಭಾರತ್ ಬಂದ್’ ಕರೆಗೆ ವಿವಿಧ ಸಂಘಟನೆಗಳು ಸೇರಿದಂತೆ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಬೆಂಗಳೂರಿನ ಟೌನ್ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಹೊಸಪೇಟೆ ನಗರದ ರೋಟರಿ ವೃತ್ತದಲ್ಲಿ ನರೇಂದ್ರ ಮೋದಿ, ಅಮಿತ್ ಷಾ, ಮುಕೇಶ್ ಅಂಬಾನಿ, ಅದಾನಿ ಹಾಗೂ ನರೇಂದ್ರ ಸಿಂಗ್ ತೋಮರ್ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.