‘ಸುಪ್ರೀಂ’ ಮೊರೆಹೋದ ರೈತ ಸಂಘಟನೆ ಭಾರತೀಯ ಕಿಸಾನ್ ಯೂನಿಯನ್ (ಭಾನು ಬಣ)

ನವದೆಹಲಿ: ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಭಾರತೀಯ ಕಿಸಾನ್ ಯೂನಿಯನ್ (ಭಾನು ಬಣ), ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.
ಆರ್ಜೆಡಿ ಸಂಸದ ಮನೋಜ್ ಝಾ, ಡಿಎಂಕೆ ಸಂಸದ ತಿರುಚ್ಚಿ ಶಿವ ಹಾಗೂ ಛತ್ತೀಸಗಡದ ರಾಕೇಶ್ ವೈಷ್ಣವ್ ಎಂಬುವರು ಈ ಕಾಯ್ದೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಈಚೆಗೆ ವಿಚಾರಣೆಗೆ ಎತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠವು ಕೇಂದ್ರಕ್ಕೆ ನೋಟಿಸ್ ನೀಡಿತ್ತು. ಈ ಅರ್ಜಿಯಲ್ಲಿ ತನ್ನನ್ನೂ ಕಕ್ಷಿದಾರನನ್ನಾಗಿ ಪರಿಗಣಿಸಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ನ (ಭಾನು ಬಣ) ಅಧ್ಯಕ್ಷ ಭಾನು ಪ್ರತಾಪ್ ಸಿಂಗ್ ಅರ್ಜಿಯಲ್ಲಿ ಹೇಳಿದ್ದಾರೆ.
ಮೂರು ಕಾಯ್ದೆಗಳು ಜಾರಿಯಲ್ಲಿ ಮುಂದುವರಿದರೆ ಇಡೀ ದೇಶವೇ ನಾಶವಾಗಲಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ಈ ಕಾಯ್ದೆಗಳು ಕಾನೂನು ಬಾಹಿರ ಮತ್ತು ಕೃಷಿ ಉತ್ಪನ್ನಗಳ ವಾಣಿಜ್ಯೀಕರಣಕ್ಕೆ ಆಸ್ಪದ ಕೊಡುತ್ತವೆ ಎಂದೂ ಹೇಳಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.