ಲಖನೌ: ಕೃಷಿ ಕಾಯ್ದೆಗಳನ್ನು ಸರ್ಕಾರ ಹಿಂದಕ್ಕೆ ಪಡೆದಿರುವ ಬಗ್ಗೆ ಬಿಜೆಪಿಯ ಕೆಲ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದರ ಬದಲು ರೈತರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ.
ಪ್ರತಿಭಟನನಿರತ ರೈತರ ಇತರ ಬೇಡಿಕೆಗಳನ್ನೂ ಸರ್ಕಾರ ಈಡೇರಿಸಬೇಕು. ಆಗ ಎಲ್ಲ ರೈತರು ಪ್ರತಿಭಟನೆ ಕೈಬಿಟ್ಟು ಮನೆಗಳಿಗೆ ತೆರಳಲು ಸಾಧ್ಯವಾಗುತ್ತದೆ ಎಂದು ಅವರು ಟ್ವೀಟ್ನಲ್ಲಿ ಹೇಳಿದ್ದಾರೆ.
ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಅವರು ತಮ್ಮ ಭಾಷಣದಲ್ಲಿ ’ ಮಸೂದೆಗಳನ್ನು ಮಂಡಿಸಲಾಗುತ್ತದೆ ಮತ್ತು ಹಿಂದಕ್ಕೂ ಪಡೆಯಲಾಗುತ್ತದೆ. ಅವು ಮತ್ತೆ ಬರುತ್ತವೆ. ಮತ್ತೆ ಜಾರಿಗೆ ತರಲಾಗುತ್ತದೆ. ಅದಕ್ಕೆ ಹೆಚ್ಚು ಸಮಯ ಹಿಡಿಯುವುದಿಲ್ಲ‘ ಎಂದು ಹೇಳಿದ್ದರು.
ಮಾಯಾವತಿ ಅವರು ಸಾಕ್ಷಿ ಮಹಾರಾಜ್ ಅವರ ಹೆಸರನ್ನು ಪ್ರಸ್ತಾಪಿಸದಿದ್ದರೂ ಅವರ ಹೇಳಿಕೆಗಳ ಬಗ್ಗೆಯೇ ಪ್ರತಿಕ್ರಿಯಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.