ಕೋಲ್ಕತ್ತ: ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಗೊಂಡವರು ದ್ರೋಹಿಗಳು. ಅವರು ಪಕ್ಷ ತೊರೆದು ಹೋಗಿದ್ದು ಒಳ್ಳೆಯದೇ ಆಯಿತು. ಅಂತಹ ದ್ರೋಹಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದರಿಂದ ಬಿಜೆಪಿಯ ಹಳೆಯ ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರು ಕಣ್ಣೀರು ಹಾಕುತ್ತಿದ್ದಾರೆ' ಎಂದು ಹೇಳಿದ್ದಾರೆ.
ಗಲಭೆ, ಲೂಟಿ ಮತ್ತು ಹತ್ಯಾ ರಾಜಕಾರಣವನ್ನು ಬಿಜೆಪಿಯು ರೂಢಿಸಿಕೊಂಡು ಬಂದಿದೆ ಎಂದು ಆರೋಪಿಸಿರುವ ಮಮತಾ, 'ಹೊರಗಿನವರು ತಮ್ಮ ಪ್ರದೇಶಗಳಲ್ಲಿ ಕಾಣಿಸಿಕೊಳ್ಳದಂತೆ ಪಶ್ಚಿಮ ಬಂಗಾಳದ ಜನರು ಎಚ್ಚರ ವಹಿಸಬೇಕು' ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರಗಳಲ್ಲಿ ಬಂಗಾಳಿ ಅಸ್ಮಿತೆಯ ಬಗ್ಗೆ ಪದೇಪದೇ ಉಲ್ಲೇಖಿಸುತ್ತಿರುವ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು 'ಹೊರಗಿನವರ ಪಕ್ಷ 'ಎಂದು ಪ್ರತಿಪಾದಿಸಿದ್ದಾರೆ.
294 ವಿಧಾನಸಭಾ ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29 ರಂದು ಮತದಾನ ನಡೆಯಲಿದೆ. ಮೇ.02ರಂದು ಫಲಿತಾಂಶ ಹೊರಬೀಳಲಿದೆ.