ತಿರುವನಂತಪುರ: ‘ಮೆಟ್ರೊಮ್ಯಾನ್’ ಇ.ಶ್ರೀಧರನ್ ಅವರನ್ನು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಶ್ರೀಧರನ್ ನೇತೃತ್ವದಲ್ಲಿ ಎಲ್ಡಿಎಫ್ ಮತ್ತು ಯುಡಿಎಫ್ ಅನ್ನು ಬಿಜೆಪಿ ಸೋಲಿಸಲಿದೆ ಎಂದು ಕೇಂದ್ರ ಸಚಿವ ವಿ.ಮುರಳೀಧರನ್ ಗುರುವಾರ ಘೋಷಿಸಿದರು. ಕೆಲವೇ ಗಂಟೆಗಳಲ್ಲಿ ಇ.ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿಲ್ಲ ಎಂದು ಹೇಳಿದರು.
ಈ ಬೆಳವಣಿಗೆಯಿಂದ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಮುಜುಗರ ಎದುರಿಸಿತು. ‘ಇ.ಶ್ರೀಧರನ್ ಅವರನ್ನು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂದು ಹೈಕಮಾಂಡ್ಗೆ ಮನವಿ ಸಲ್ಲಿಸುತ್ತೇವೆ’ ಎಂದು ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಅವರು ಗುರುವಾರ ಬೆಳಿಗ್ಗೆ ಹೇಳಿದ್ದರು. ಮಧ್ಯಾಹ್ನದ ವೇಳೆಗೆ, ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವರು ಘೋಷಿಸಿದ್ದರು. ಹೀಗಾಗಿ ಈ ಸುದ್ದಿ ವೈರಲ್ ಆಗಿತ್ತು.
ಆದರೆ, ಕೆಲವೇ ಗಂಟೆಗಳಲ್ಲಿ ವಿ.ಮುರಳೀಧರನ್ ಅವರು ಸ್ಪಷ್ಟೀಕರಣ ನೀಡಿದರು. ‘ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎಂದು ಮನವಿ ಸಲ್ಲಿಸಲಾಗಿದೆಯಷ್ಟೆ. ಅದನ್ನು ನಾನು ತಪ್ಪಾಗಿ ಅರ್ಥೈಸಿಕೊಂಡು, ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದ್ದೇನೆ. ಶ್ರೀಧರನ್ ಅವರನ್ನು ಕೇರಳ ಚುನಾವಣೆಗೆ ಎನ್ಡಿಎಯ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿಲ್ಲ’ ಎಂದು ಮುರಳೀಧರನ್ ಅವರು ಸ್ಪಷ್ಟನೆ ನೀಡಿದರು. ಇದನ್ನು ಹಲವು ಕೇರಳಿಗರು ಟ್ವಿಟರ್ನಲ್ಲಿ ಲೇವಡಿ ಮಾಡಿದ್ದಾರೆ.
ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಶ್ರೀಧರನ್ ಅವರು ಹೇಳಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.