ನವದೆಹಲಿ: ಭಾರತ್ ಜೋಡೊ ಯಾತ್ರೆಗೆ ಲಭಿಸಿರುವ ಯಶಸ್ಸು ನೋಡಿ ಬಿಜೆಪಿ ದಂಗಾಗಿದೆ ಎಂದು ಕಾಂಗ್ರೆಸ್ ಸೋಮವಾರ ಹೇಳಿದೆ.
ಈ ಹಿನ್ನೆಲೆಯಲ್ಲಿ ಭಾರತ್ ಜೋಡೊ ಯಾತ್ರೆ ವಿರುದ್ಧ ಬಿಜೆಪಿ ಅಪಪ್ರಚಾರ ಹಬ್ಬುತ್ತಿದೆ ಎಂದು ಆರೋಪಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್, ಭಾರತ್ ಜೋಡೊ ಯಾತ್ರೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರುವ ಭೀತಿ ಬಿಜೆಪಿ ನಾಯಕರಲ್ಲಿ ಪ್ರತಿಫಲಿಸುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಜನರಿಂದ ಉತ್ತಮ ಪ್ರೀತಿ, ಬೆಂಬಲ ದೊರಕುತ್ತಿದೆ. ಈ ಬಗ್ಗೆ ಬಿಜೆಪಿ ಉನ್ನತ ಮಟ್ಟದ ನಾಯಕರಲ್ಲಿ ಅಸಮಾಧಾನವಿದೆ ಎಂದು ಹೇಳಿದರು.
ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಸರ್ಕಾರ ನಾಶಪಡಿಸಿದ್ದನ್ನು ಸರಿಪಡಿಸಲು ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ. ಆದರೆ ಓರ್ವ ನಾಯಕನ ವಿರುದ್ಧ ಇಡೀ ಸರ್ಕಾರಿ ಆಡಳಿತ ಯಂತ್ರ ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದರು.