ಪಣಜಿ: ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರನ್ನು ಸೋಮವಾರ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಅವರು ಭಾನುವಾರ ಹೇಳಿದ್ದಾರೆ.
ಬಿಜೆಪಿ ಶಾಸಕಾಂಗ ಪಕ್ಷದ ಬಹುನಿರೀಕ್ಷಿತ ಸಭೆ ಸೋಮವಾರ ಸಂಜೆ 4 ಗಂಟೆಗೆ ನಿಗದಿಯಾಗಿದೆ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಶಾಸಕಾಂಗ ಪಕ್ಷದ ನಾಯಕ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯಪಾಲರ ಭೇಟಿಯ ಬಳಿಕ ಹೊಸ ಸರ್ಕಾರದ ಪ್ರಮಾಣವಚನದ ದಿನಾಂಕ ನಿಗದಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಬಿಜೆಪಿ ವೀಕ್ಷಕ ನರೇಂದ್ರ ಸಿಂಗ್ ತೋಮರ್, ಸಹ ವೀಕ್ಷಕ ಎಲ್. ಮುರುಗನ್, ಗೋವಾ ಚುನಾವಣಾ ಉಸ್ತುವಾರಿ ದೇವೇಂದ್ರ ಫಡಣವೀಸ್, ರಾಜ್ಯ ಉಸ್ತುವಾರಿ ಸಿ.ಟಿ. ರವಿ ಅವರು ಶಾಸಕಾಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ.