ನವದೆಹಲಿ (ಪಿಟಿಐ): ಪಂಜಾಬ್ನಲ್ಲಿ ಪ್ರಧಾನಮಂತ್ರಿಗಳ ಭದ್ರತೆ ವ್ಯವಸ್ಥೆಯಲ್ಲಿ ಗಂಭೀರ ಲೋಪವಾಗಿದೆ ಎಂಬ ಆರೋಪ ಕುರಿತಂತೆ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.
ಪ್ರಧಾನಮಂತ್ರಿ ಮತ್ತು ಬೆಂಗಾವಲು ಪಡೆಯಿದ್ದ ವಾಹನಗಳು ಇದೇ 5ರಂದು ಫಿರೋಜ್ಪುರ್ನ ಮೇಲ್ಸೇತುವೆಯಲ್ಲಿ 15 ನಿಮಿಷ ಸ್ಥಗಿತವಾಗಿದ್ದವು. ಆಗ ರಸ್ತೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಇದು ಭದ್ರತಾ ವೈಫಲ್ಯದ ಚರ್ಚೆಗೆ ಆಸ್ಪದವಾಗಿತ್ತು.
ಲಾಯರ್ಸ್ ವಾಯ್ಸ್ ಸಂಘಟನೆ ಈ ಬಗ್ಗೆ ಅರ್ಜಿ ಸಲ್ಲಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದಲ್ಲಿ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾಕೊಹ್ಲಿ ಅವರಿರುವ ಪೀಠ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಭದ್ರತಾ ವೈಪಲ್ಯ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.