ನವದೆಹಲಿ: ಹಿಂಡನ್ಬರ್ಗ್ ವರದಿ ಬಳಿಕ ಅದಾನಿ ಸಮೂಹದ ಕಂಪನಿಗಳ ಷೇರುಗಳ ಮೌಲ್ಯ ತೀವ್ರವಾಗಿ ಕುಸಿಯುತ್ತಿರುವ ಕುರಿತು ಚರ್ಚೆಗೆ ಒತ್ತಾಯಿಸಿ ಸಂಸತ್ತಿನ ಉಭಯ ಸಂದನಗಳಲ್ಲೂ ವಿರೋಧ ಪಕ್ಷಗಳು ಗದ್ದಲವೆಬ್ಬಿಸಿದರಿಂದ ಕಲಾಪವನ್ನು ಮಧ್ಯಾಹ್ನ 2ಗಂಟೆಗೆ ಮುಂದೂಡಲಾಗಿದೆ.
ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯ ಕುಸಿತ ಕಾಣುತ್ತಿದ್ದು, ಸಂಸತ್ತಿನ ಸಾಮಾನ್ಯ ಕಲಾಪಗಳನ್ನು ಸ್ಥಗಿತಗೊಳಿಸಿ ಭಾರತೀಯ ಹೂಡಿಕೆದಾರರಿಗೆ ಎದುರಾಗಿರುವ ಅಪಾಯದ ಕುರಿತಂತೆ ಚರ್ಚಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.
ಇದಕ್ಕೂ ಮುನ್ನ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಚೇರಿಯಲ್ಲಿ ಸಭೆ ಸೇರಿದ್ದ 13 ವಿರೋಧ ಪಕ್ಷಗಳ ನಾಯಕರು ಸಂಸತ್ತಿನಲ್ಲಿ ಹೋರಾಟದ ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದರು.
ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಮಾಜವಾದಿ, ಡಿಎಂಕೆ, ಜೆಡಿಯು ಮತ್ತು ಎಡಪಕ್ಷಗಳ ನಾಯಕರು ಸಭೆಯಲ್ಲಿ ಇದ್ದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಎಪಿ ನಾಯಕ ಸಂಜಯ್ ಸಿಂಗ್, ಭಾರತ ರಾಷ್ಟ್ರೀಯ ಸಮಿತಿಯ ಕೆ. ಕೇಶವ ರಾವ್ ರಾಜ್ಯಸಭೆಯಲ್ಲಿ ಚರ್ಚೆಗೆ ಒತ್ತಾಯಿಸಿ ನೋಟಿಸ್ ನೀಡಿದ್ದರು.
ಲೋಕಸಭೆಯಲ್ಲಿ ಕಾಂಗ್ರೆಸ್ ಸಚೇತಕ ಮಾಣಿಕ್ಕಂ ಠಾಗೋರ್ ಲೋಕಸಭೆಯಲ್ಲಿ ನೋಟಿಸ್ ನೀಡಿದ್ದರು.