ನವದೆಹಲಿ: ಇದೇ ತಿಂಗಳು ನಿಗದಿಯಾಗಿರುವ ಸಿಬಿಎಸ್ಇ 12ನೇ ತರಗತಿಯ ಪೂರಕ ಪರೀಕ್ಷೆಗಳನ್ನು ನಿಗದಿತ ದಿನಗಳಂದು ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಕಾರಣ,ಈ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಕೆಯಾಗಿರುವ ಅರ್ಜಿಗೆ ಮಂಡಳಿ ವಿರೋಧ ವ್ಯಕ್ತಪಡಿಸಿದೆ.
‘ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸೂಕ್ತ ರಕ್ಷಣಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ’ ಎಂದು ಮಂಡಳಿ ತಿಳಿಸಿದೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು, ‘ಪರೀಕ್ಷೆಗಳನ್ನು ಮುಂದೂಡುವುದರಿಂದ ವಿದ್ಯಾರ್ಥಿಗಳಿಗೆ ಸಹಾಯವಾಗುತ್ತದೆಯೇ’ ಎಂದು ಅರ್ಜಿದಾರರ ಪರ ಹಾಜರಾದ ವಕೀಲರನ್ನು ಕೇಳಿತು.
ಇದೇ ವೇಳೆ, ‘ಪರೀಕ್ಷೆ ಇಲ್ಲದಿದ್ದರೆ, ಸಿಬಿಎಸ್ಇ ಬಳಿ ಬೇರೆ ವಿಧಾನಗಳೇನಾದರೂ ಇವೆಯೇ’ ಎಂದು ನ್ಯಾಯಪೀಠ ಪ್ರಶ್ನಿಸಿತು.
ಇದಕ್ಕೆ ಉತ್ತರಿಸಿದ ಸಿಬಿಎಸ್ಇ ಮಂಡಳಿ ಪರ ವಕೀಲರು, ‘ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾವು ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿದ್ದೇವೆ. ಮೊದಲು 575 ಪರೀಕ್ಷಾ ಕೇಂದ್ರಗಳಿದ್ದವು. ಈಗ ಕೇಂದ್ರಗಳ ಸಂಖ್ಯೆಯನ್ನು 1278ಕ್ಕೆ ಹೆಚ್ಚಿಸಿದ್ದೇವೆ’ ಎಂದು ತಿಳಿಸಿದರು.
‘40 ವಿದ್ಯಾರ್ಥಿಗಳು ಕುಳಿತು ಪರೀಕ್ಷೆ ಬರೆಯುತ್ತಿದ್ದ ಕೊಠಡಿಯಲ್ಲಿ ಈಗ 12 ವಿದ್ಯಾರ್ಥಿಗಳಿಷ್ಟೇ ಅವಕಾಶ ನೀಡಿದ್ದೇವೆ. ಜತೆಗೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದು ಮಾಹಿತಿ ನೀಡಿದರು.
’ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ನಲ್ಲಿ ಪರೀಕ್ಷೆಗಳು ನಡೆಯಲಿವೆ’ ಎಂದು ಮಂಡಳಿ ಹೇಳಿದೆ.
ಈ ಕುರಿತು ಅಫಿಡವಿಟ್ ಸಲ್ಲಿಸುವಂತೆಸಿಬಿಎಸ್ಇಗೆ ಹೇಳಿದ ಪೀಠವುವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿತು.