ಮುಕುಲ್ ರಾಯ್ಗೆ ನೀಡಿದ್ದ ವಿಐಪಿ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಮತ್ತೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸೇರಿದ್ದ ಪಶ್ಚಿಮ ಬಂಗಾಳದ ಶಾಸಕ ಮುಕುಲ್ ರಾಯ್ ಅವರಿಗೆ ನೀಡಿದ್ದ ‘ಝೆಡ್‘ ಶ್ರೇಣಿ ಭದ್ರತೆಯನ್ನು ಸರ್ಕಾರ ಹಿಂದಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.
ಮುಕುಲ್ ರಾಯ್ ಅವರಿಗೆ ನೀಡಿದ್ದ ಝೆಡ್ ಶ್ರೇಣಿ ಭದ್ರತೆಯನ್ನು ಹಿಂದಕ್ಕೆ ಪಡೆಯುವಂತೆ ಕೇಂದ್ರ ಗೃಹ ಸಚಿವಾಲಯ, ಕೇಂದ್ರೀಯ ಮೀಸಲು ಪೊಲೀಸ್ ಪಡೆಗೆ(ಸಿಆರ್ಪಿಎಫ್) ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕೋಲ್ಕತ್ತದಲ್ಲಿ ಕಳೆದ ವಾರ ಮುಕುಲ್ ರಾಯ್ ಅವರು ತಮ್ಮ ಪುತ್ರ ಸುಭ್ರಾಂಶು ರಾಯ್ ಅವರೊಂದಿಗೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದರು.
ಪಶ್ಚಿಮ ಬಂಗಾಳದ ಉತ್ತರ ಕೃಷ್ಣನಗರದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಮುಕುಲ್ ರಾಯ್ ಅವರು, ‘ತನಗೆ ನೀಡಿರುವ ಭದ್ರತೆಯನ್ನು ಹಿಂಪಡೆಯುವಂತೆ‘ ಕೇಂದ್ರಕ್ಕೆ ಪತ್ರ ಬರೆದಿದ್ದರು‘ ಎಂದು ಮೂಲಗಳು ತಿಳಿಸಿವೆ.
ಟಿಎಂಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಹಾಕಿದ ನಂತರ ಮುಕುಲ್ ರಾಯ್ ಅವರು ನವೆಂಬರ್ 2017ರಲ್ಲಿ ಬಿಜೆಪಿ ಸೇರಿದ್ದರು. ಬಿಜೆಪಿ ರಾಯ್ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.