ನವದೆಹಲಿ: ಐದು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಮತ್ತು ಪಾಸಿಟಿವಿಟಿ ದರ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಈ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದೆ.
ಈ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿವೆ ಮತ್ತು ಹೆಚ್ಚಿನ ಪಾಸಿಟಿವಿಟಿ ದರ ವರದಿಯಾಗಿದೆ. ಹೀಗಾಗಿ, ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಪುನಃ ಆರಂಭಿಸುವಲ್ಲಿ ಮುಂಜಾಗ್ರತೆ ವಹಿಸುವಂತೆ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಹರಿಯಾಣ, ಉತ್ತರ ಪ್ರದೇಶ, ಮಿಜೋರಾಂ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿವೆ.
ಸೋಂಕು ಹರಡುವಿಕೆಯ ಮೇಲ್ವಿಚಾರಣೆಯನ್ನು ಮುಂದುವರಿಸಲು ಮತ್ತು ಕೋವಿಡ್-19 ರ ತ್ವರಿತ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.
ಜನನಿಬಿಡ ಪ್ರದೇಶಗಳಲ್ಲಿ ಅಗತ್ಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಮಾವಳಿಗಳ ಪಾಲನೆ ಹಾಗೂ 'ಪರೀಕ್ಷೆ-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಅನುಸರಣೆಯ ಐದು ತಂತ್ರಗಳನ್ನು ಮುಂದುವರಿಸುವಂತೆ ಹೇಳಿದೆ.
'ರಾಜ್ಯಗಳು ಕಟ್ಟುನಿಟ್ಟಾಗಿ ನಿಗಾ ವಹಿಸುವುದು ಮತ್ತು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಯಾವುದೇ ಕ್ಷೇತ್ರಗಳಲ್ಲಿ ಅಗತ್ಯವಿದ್ದರೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ'. ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಪ್ರದೇಶಗಳಲ್ಲಿ ನಿಯಮಿತ ಮೇಲ್ವಿಚಾರಣೆ ಮತ್ತು ತ್ವರಿತ ಅನುಸರಣಾ ಕ್ರಮವನ್ನು ಕೈಗೊಳ್ಳಬೇಕು ಎಂದು ಭೂಷಣ್ ಪತ್ರದಲ್ಲಿ ತಿಳಿಸಿದ್ದಾರೆ.