ಲಖನೌ: ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸಲು ನಿರಾಕರಿಸಿರುವ ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ, ‘ಬಿಜೆಪಿ ಚುನಾವಣಾ ಹಿತಾಸಕ್ತಿಗಾಗಿ ಮಾತ್ರ ಈ ಸಮುದಾಯವನ್ನು ಬಳಸಿಕೊಳ್ಳುತ್ತಿರುವುದನ್ನು ಇದು ಬಹಿರಂಗಪಡಿಸಿದೆ‘ ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸಲು ‘ಆಡಳಿತಾತ್ಮಕವಾಗಿ ಕಷ್ಟಕರ ಮತ್ತು ತೊಡಕಿನ ಕೆಲಸ. ಅಲ್ಲದೇ ಇಂಥ ಮಾಹಿತಿಯನ್ನು ಗಣತಿ ವ್ಯಾಪ್ತಿಯಿಂದ ಹೊರಗಿಟ್ಟಿರುವುದು ಪ್ರಜ್ಞಾಪೂರ್ವಕ ನಿರ್ಧಾರ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಮಾಯಾವತಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಬಿಎಸ್ಪಿ ನಾಯಕಿ, ‘ಕೇಂದ್ರ ಸರ್ಕಾರವು ಹಿಂದುಳಿದ ವರ್ಗಗಳ ಜಾತಿ ಗಣತಿಯನ್ನು ನಡೆಸಲು ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸುವ ಮೂಲಕ, ಬಿಜೆಪಿ ತನ್ನ ಚುನಾವಣಾ ಹಿತಾಸಕ್ತಿಗಾಗಿ ಒಬಿಸಿಯನ್ನು ಹೇಗೆ ಬಳಸಿಕೊಳ್ಳುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಇದುತೀವ್ರ ಕಳವಳಕಾರಿ ವಿಷಯ. ಇದರಿಂದ ಬಿಜೆಪಿಯ ಮಾತು ಮತ್ತು ಕೃತಿ ನಡುವೆ ಎಷ್ಟು ವ್ಯತ್ಯಾಸವಿದೆ ಎಂಬುದು ಗೊತ್ತಾಗುತ್ತದೆ‘ ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸುವುದನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.