ಧಮತರಿ, ಛತ್ತೀಸ್ಗಡ: ಛತ್ತೀಸ್ಗಡದ ಧಮತರಿ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ವ್ಯಕ್ತಿಗಳು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪ್ರತಿಮೆಯೊಂದನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.
ದುಗ್ಲಿ ಗ್ರಾಮದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಸಹಜ ಗಾತ್ರದ ಮಾಜಿ ಪ್ರಧಾನಿಯ ಪ್ರತಿಮೆಯ ಧ್ವಂಸಗೊಂಡಿರುವುದು ಬೆಳಿಗ್ಗೆ ಕಂಡು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೃತ್ಯ ಎಸಗಿದ ದುಷ್ಕರ್ಮಿಗಳಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
‘ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪರಿಚಿತ ವ್ಯಕ್ತಿಗಳು ಗುರುವಾರ ರಾತ್ರಿ ರಾಜೀವ್ ಗಾಂಧಿ ಅವರ ಪ್ರತಿಮೆಯ ತಲೆಯ ಭಾಗಕ್ಕೆ ಹಾನಿ ಮಾಡಿದ್ದಾರೆ. ಈ ಸಂಬಂಧ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣವೊಂದನ್ನು ದಾಖಲಿಸಿದ್ದು ತನಿಖೆ ಆರಂಭಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.
ಕೃತ್ಯ ಖಂಡಿಸಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಧ್ರುವ, ಪಕ್ಷದ ಧಮತರಿ ಜಿಲ್ಲಾ ಘಟಕದ ಮುಖ್ಯಸ್ಥ ಶರದ್ ಲೋಹನಾ, ಪಕ್ಷದ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ನಂತರದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡರುದುಗ್ಲಿ ಕೌಹಬಹ್ರಾ ಪೊಲೀಸ್ ಠಾಣೆಯಲ್ಲಿ ಲಿಖಿತ ಪತ್ರವೊಂದನ್ನು ಸಲ್ಲಿಸಿದರು.
2019ರ ಆಗಸ್ಟ್ನಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತಮ್ಮ ಸಂಪುಟ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ರಾಜೀವ್ ಗಾಂಧಿ ಅವರ ಪ್ರತಿಮೆ ಅನಾವರಣಗೊಳಿಸಿದ್ದರು.