ನವದೆಹಲಿ: ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರ ಮುಸ್ಲಿಮರ ವಿರುದ್ಧ ಪಕ್ಷಪಾತಿಯಾಗಿ ವರ್ತಿಸುತ್ತಿದೆ ಎಂದು ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.
ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರ ಕೈಗೊಂಡಿರುವ ಕ್ರಮಗಳು ‘ಕೋಮುವಾದ’ ಪ್ರೇರಿತವಾಗಿದೆ ಎಂದು ಓವೈಸಿ ಗುಡುಗಿದ್ದಾರೆ.
ಮದುವೆಯಾದ ಹುಡುಗಿಯರಿಗೆ ಏನಾಗುತ್ತದೆ, ಅವರನ್ನು ಯಾರು ನೋಡಿಕೊಳ್ಳುತ್ತಾರೆ? ಅಸ್ಸಾಂ ಸರ್ಕಾರ 4 ಸಾವಿರಕ್ಕೂ ಹೆಚ್ಚು ಬಾಲ್ಯವಿವಾಹ ಪ್ರಕರಣಗಳನ್ನು ದಾಖಲಿಸಿದ್ದು, ಅಲ್ಲಿನ ಸರ್ಕಾರ ಮುಸ್ಲಿಮರ ವಿರುದ್ಧ ಪಕ್ಷಪಾತಿ ಧೋರಣೆಯನ್ನು ಹೊಂದಿದೆ ಎಂದು ದೂರಿದ್ದಾರೆ.
What'll happen to girls who were married, who'll take care of them? Assam govt booked 4000 cases, why aren't they opening new schools? BJP's govt in Assam is biased against Muslims. They gave land to landless people in Upper Assam but didn't do same in Lower Assam:AIMIM chief pic.twitter.com/ltqVcORpU5
— ANI (@ANI) February 4, 2023
‘ಹಿಮಂತ ಬಿಸ್ವಾ ಶರ್ಮಾ ಅವರೇ, ಮದರಸಾಗಳನ್ನು ಮುಚ್ಚಿ ಎಷ್ಟು ಶಾಲೆಗಳನ್ನು ತೆರೆದಿದ್ದೀರಿ?, ಏಕೆ ಹೊಸ ಶಾಲೆಗಳನ್ನು ತೆರೆಯುತ್ತಿಲ್ಲ. ಭೂರಹಿತರಿಗೆ ಭೂಮಿ ನೀಡಲು ಸರ್ಕಾರ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ’ ಎಂದು ಓವೈಸಿ ಪ್ರಶ್ನಿಸಿದ್ದಾರೆ.
ಅಸ್ಸಾಂನಲ್ಲಿ 4 ಸಾವಿರಕ್ಕೂ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಇದುವರೆಗೆ 1,800ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂಬ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಹೇಳಿದ್ದರು.
‘ಬಂಧನ ಕಾರ್ಯಾಚರಣೆಯು ಶುಕ್ರವಾರ ಬೆಳಿಗ್ಗೆ ಆರಂಭವಾಗಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ಮುಂದುವರಿಯಲಿದೆ’ ಎಂದೂ ತಿಳಿಸಿದ್ದರು.
ರಾಜ್ಯ ಸಚಿವ ಸಂಪುಟವು ಜನವರಿ 23ರಂದು ಬಾಲ್ಯವಿವಾಹ ಪ್ರಕರಣಗಳ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧಾರ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು 4,004 ಬಾಲ್ಯ ವಿವಾಹ ಪ್ರಕರಣಗಳನ್ನು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.