ನವದೆಹಲಿ:ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ/ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್) ಅರ್ಜಿಗಳು ದುರ್ಬಳಕೆಯಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಕಳವಳ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಗಳು ಹಾಗೂ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳ ಜಂಟಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಪಿಐಎಲ್ ಈಗ ವೈಯಕ್ತಿಕ ಹಿತಾಸಕ್ತಿಗಾಗಿ (ಪರ್ಸನಲ್ ಇಂಟರೆಸ್ಟ್ ಲಿಟಿಗೇಷನ್) ಬಳಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
‘ಸಂವಿಧಾನವು ಪ್ರಜಾಪ್ರಭುತ್ವದ ಮೂರು ಅಂಗಗಳ ನಡುವೆ ಅಧಿಕಾರವನ್ನು ಪ್ರತ್ಯೇಕಿಸಿದೆ. ಕರ್ತವ್ಯವನ್ನು ನಿರ್ವಹಿಸುವಾಗ ನ್ಯಾಯಾಂಗಕ್ಕೆ ‘ಲಕ್ಷ್ಮಣ ರೇಖೆ’ಯ ಅರಿವು ಇರಬೇಕು. ನ್ಯಾಯಾಂಗದ ತೀರ್ಪುಗಳ ಹೊರತಾಗಿಯೂ ಸರ್ಕಾರಗಳು ಉದ್ದೇಶಪೂರ್ವಕವಾಗಿ ನಿಷ್ಕ್ರಿಯವಾಗಿರುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಒಳ್ಳೆಯದಲ್ಲ’ ಎಂದು ಅವರು ಹೇಳಿದರು.
ಜಂಟಿ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.