ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ್ದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ‘ಸದೃಢವಾದ ನ್ಯಾಯಾಂಗವು ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುವುದರಿಂದ, ನ್ಯಾಯಾಂಗದ ಮೂಲಸೌಕರ್ಯ ಸುಧಾರಣೆಗಾಗಿ ಕೇಂದ್ರ ಸರ್ಕಾರವು ಹಲವಾರು ನಿರ್ಧಾರಗಳನ್ನು ಕೈಗೊಂಡಿದೆ. ಕೆಳ ನ್ಯಾಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ ₹ 9,000 ಕೋಟಿ ಬಿಡುಗಡೆ ಮಾಡುವ ಸಂಬಂಧ ಕಳೆದ ಬಾರಿಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ’ ಎಂದು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು.