ಡೆಹ್ರಾಡೂನ್: ಉತ್ತರಾಖಂಡದಡೆಹ್ರಾಡೂನ್ ನಗರದ ಹೊರವಲಯದಲ್ಲಿರುವ ಖಬದ್ವಾಲಾ ಹಳ್ಳಿಯ ಸತ್ಲಾ ದೇವಿ ದೇವಾಲಯದ ಬಳಿ ಸಂಭವಿಸಿದ ಮೇಘಸ್ಫೋಟದಿಂದಾಗಿ ನದಿಗಳು ಉಕ್ಕಿ ಹರಿದ ಪರಿಣಾಮ ಪ್ರವಾಹದ ಸ್ಥಿತಿಯುಂಟಾಗಿದೆ.
ಮಂಗಳವಾರ ತಡರಾತ್ರಿ ಸಂಭವಿಸಿದ ಮೇಘಸ್ಫೋಟದ ಬಳಿಕ ಪ್ರವಾಹದ ನೀರು ಮನೆಗಳಿಗೆ ನುಗ್ಗಿದೆ. ವಿದ್ಯುತ್ ಕಂಬಗಳು, ಮರಗಳು ಉರುಳಿ ಬಿದ್ದವು, ವಾಹನಗಳು ಕೊಚ್ಚಿ ಹೋಗಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಹಾಗಿದ್ದರೂ ಎಲ್ಲಿಯೂ ಪ್ರಾಣಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.
ಬುಧವಾರದಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮ್ ಅವರು ಸಂಪುಟ ಸಚಿವ ಗಣೇಶ್ ಜೋಶಿ ಅವರೊಂದಿಗೆ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿಗಳನ್ನು ಒದಗಿಸಿದರು.
ಅಲ್ಲದೆ ಭವಿಷ್ಯದಲ್ಲಿ ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಡೆಹ್ರಾಡೂನ್ನಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಿಸ್ಪಾನಾ ಹಾಗೂ ಬಿಂದಾಲ್ ನದಿಗಳು ತುಂಬಿ ಹರಿಯುತ್ತಿದ್ದು, ಅನೇಕ ಪ್ರದೇಶಗಳು ಜಲಾವೃತವಾಗಿದೆ.