ನವದೆಹಲಿ: ತ್ರಿವರ್ಣ ಧ್ವಜ ಹಾರಿಸುವ ವಿಡಿಯೊ, ಚಿತ್ರ ಬಿಡುಗಡೆಗೊಳಿಸುವಂತೆ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಶನಿವಾರ ಸವಾಲು ಹಾಕಿದೆ.
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವಂತೆ ಕೇಂದ್ರ ಸರ್ಕಾರವು ದೇಶದಾದ್ಯಂತ ಅಭಿಯಾನ ಹಮ್ಮಿಕೊಂಡಿದೆ.
75ನೇ ಸ್ವಾತಂತ್ರೋತ್ಸವದ ಅಂಗವಾಗಿ ಸಂಸತ್ತಿನಲ್ಲಿ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಲ್ಲ ವಿಷಯದಲ್ಲೂ ತಪ್ಪು ಹುಡುಕಲು ಪ್ರಯತ್ನಿಸುತ್ತಾರೆ. 'ಹರ್ ಘರ್ ತಿರಂಗಾ' ಅಭಿಯಾನ ರಾಜಕೀಯ ಪ್ರಾಯೋಜಿತವಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತ್ರಿವರ್ಣ ಧ್ವಜ ಹಾರಿಸಲಿ ಮತ್ತು ಚಿತ್ರಗಳನ್ನು ಹಂಚಿಕೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.
ಅವರೆಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಂಡರೂ ಚಿತ್ರ ಹಂಚಿಕೊಂಡಿರಲಿಲ್ಲ ಎಂದು ಸಂಬಿತ್ ವಾಗ್ದಾಳಿ ನಡೆಸಿದರು.
ಐತಿಹಾಸಿಕ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ, 25,50 ಹಾಗೂ 60ನೇ ಸ್ವಾತಂತ್ರೋತ್ಸವ ಆಚರಣೆ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಆದರೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಯಾವುದೇ ಕಾರ್ಯಕ್ರಮ ನಿಗದಿಯಾಗಿಲ್ಲ. ಇದನ್ನು 'ಸರ್ವಜ್ಞಾನಿಯನ್ನು ವೈಭವೀಕರಿಸಲು' ಕಾರ್ಯಕ್ರಮವನ್ನು ಮೊಟಕುಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.