ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ ಚುನಾವಣೆ: ನಿರ್ಭೀತಿಯಿಂದ ಮತ ಚಲಾಯಿಸುವಂತೆ ಜನರಿಗೆ ಖರ್ಗೆ ಕರೆ

Last Updated 16 ಫೆಬ್ರುವರಿ 2023, 5:41 IST
ಅಕ್ಷರ ಗಾತ್ರ

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತ್ರಿಪುರಾ ಜನರಿಗೆ ಮನವಿ ಮಾಡಿದ್ದಾರೆ.

60 ಸದಸ್ಯ ಬಲದ ತ್ರಿಪುರಾ ವಿಧಾನಸಭೆಗೆ ಇಂದು (ಫೆಬ್ರುವರಿ 16) ಮತದಾನ ನಡೆಯುತ್ತಿದೆ. ರಾಜ್ಯದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮಾರ್ಚ್‌ 2ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆ ಕುರಿತಂತೆ ಟ್ವೀಟ್ ಮಾಡಿರುವ ಖರ್ಗೆ, ‘ತ್ರಿಪುರಾದ ಜನರು ಬದಲಾವಣೆಗಾಗಿ ಒಂದಾಗಿದ್ದಾರೆ. ಪ್ರತಿಯೊಬ್ಬರು, ವಿಶೇಷವಾಗಿ ಯುವಕರು ಹೊರಬಂದು ಪ್ರಜಾಪ್ರಭುತ್ವದ ಉತ್ಸವದಲ್ಲಿ ಭಾಗವಹಿಸಿ. ಶಾಂತಿ ಮತ್ತು ಪ್ರಗತಿಗಾಗಿ ಪ್ರಾಮಾಣಿಕವಾಗಿ ಮತ ಚಲಾಯಿಸಿ. ನಿರ್ಭೀತಿಯಿಂದ ಮತ ಚಲಾಯಿಸಿ’ ಎಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಬಿಜೆಪಿ, ಕಾಂಗ್ರೆಸ್‌, ಕಮ್ಯುನಿಸ್ಟ್‌ ಪಕ್ಷಗಳು ಸ್ಪರ್ಧೆ ಮಾಡಿವೆ.

ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು 6 ಸ್ಥಾನಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ.

ಕಾಂಗ್ರೆಸ್‌ ಪಕ್ಷ, ಕಮ್ಯುನಿಸ್ಟ್‌ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದ್ದು 13 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಎಡ ಪಕ್ಷಗಳಾದ ಸಿಪಿಐ, ಫಾರ್ವರ್ಡ್‌ ಬ್ಲಾಕ್‌, ಸಿಪಿಐ(ಎಂ), ಆರ್‌ಎಸ್‌ಪಿ ಪಕ್ಷಗಳು 47 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿವೆ. ಸ್ಥಳೀಯ ಪಕ್ಷ ತ್ರಿಪುರಾ ಮೊರ್ಚಾ 42 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ.

ಸುಮಾರು 3,337 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು ಮತಗಟ್ಟೆಗಳಲ್ಲಿ 1,100 ಮತಗಟ್ಟೆಗಳನ್ನು ಸೂಕ್ಷ್ಮ ಮತ್ತು 28 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT