ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷುಲ್ಲಕ ರಾಜಕಾರಣಕ್ಕಾಗಿ ಪೇರರಿವಾಳನ್‌ ಬಿಡುಗಡೆ: ಕಾಂಗ್ರೆಸ್ ತೀವ್ರ ಆಕ್ರೋಶ

Last Updated 18 ಮೇ 2022, 12:19 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

‘ಅಪರಾಧಿಯ ಬಿಡುಗಡೆಯಿಂದ ನೋವಾಗಿದೆ. ಮಾಜಿ ಪ್ರಧಾನ ಮಂತ್ರಿಗಳ ಹತ್ಯೆ ಅಪರಾಧಿಯನ್ನು ಕ್ಷುಲ್ಲಕ ರಾಜಕಾರಣಕ್ಕಾಗಿ ಬಿಡುಗಡೆ ಮಾಡಲು ಆದೇಶಿಸುವಂಥ ಪರಿಸ್ಥಿತಿಯನ್ನು ನ್ಯಾಯಾಲಯದಲ್ಲಿ ಸೃಷ್ಟಿಸಲಾಯಿತು’ ಎಂದು ಕಾಂಗ್ರೆಸ್ ದೂರಿದೆ.

ಈ ಬೆಳವಣಿಗೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಮಾತ್ರ ಸಿಟ್ಟಾಗಿಲ್ಲ, ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರೂ ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

‘ಭಯೋತ್ಪಾದಕ ಎಂದಿಗೂ ಭಯೋತ್ಪಾದಕನೇ ಹಾಗೂ ಆತನನ್ನು ಹೇಗೆ ನಡೆಸಿಕೊಳ್ಳಬೇಕೋ ಹಾಗೆಯೇ ನಡೆಸಿಕೊಳ್ಳಬೇಕು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಯ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವುದರಿಂದ ನಾವೆಲ್ಲ ತೀವ್ರ ಬೇಸರಗೊಂಡಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಪೇರರಿವಾಳನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಬೆಳಿಗ್ಗೆ ಆದೇಶಿಸಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಅಪರಾಧಿಗಳಲ್ಲಿ ಪೇರರಿವಾಳನ್ ಒಬ್ಬರಾಗಿದ್ದು, 31 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. 1991ರ ಮೇ 21ರಂದು ರಾಜೀವ್ ಗಾಂಧಿ ಅವರು ಎಲ್‌ಟಿಟಿಇ ಉಗ್ರರಿಂದ ತಮಿಳುನಾಡಿನ ಶ್ರೀಪೆರುಂಬುದೂರಿನಲ್ಲಿ ಹತ್ಯೆಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT