ಹಿಮಾಚಲದಲ್ಲಿ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆ: ಕಾಂಗ್ರೆಸ್ ಮುಖಂಡರ ಸ್ವಾಗತ

ಶಿಮ್ಲಾ: ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ(ಓಪಿಎಸ್)ಯನ್ನು ಮರುಸ್ಥಾಪಿಸಿ, ಹಿಮಾಚಲ ಪ್ರದೇಶ ಸರ್ಕಾರ ಅನುಮೋದನೆ ನೀಡಿರುವುದನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಿದ್ದಾರೆ.
ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರವು ಶುಕ್ರವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಅನುಮೋದನೆ ನೀಡಿತು.
ಹಿಮಾಚಲ ಪ್ರದೇಶದ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಿರುವುದನ್ನು ಸ್ವಾಗತಿಸಿದ್ದಾರೆ.
ಸರ್ಕಾರಿ ನೌಕರರ ಹಳೆ ಪಿಂಚಣಿ ಯೋಜನೆ ಮರುಸ್ಥಾಪನೆ ಮಾಡುವುದಾಗಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು.
ಸಚಿವ ಸಂಪುಟದ ಸಭೆ ಬಳಿಕ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ಸುದ್ದಿಗಾರರ ಜೊತೆ ಮಾತನಾಡಿ, ಈ ದಿನದಿಂದ ಸರ್ಕಾರಿ ನೌಕರರು ಹಳೆ ಪಿಂಚಣಿ ಯೋಜನೆ ಲಾಭವನ್ನು ಪಡೆಯಬಹುದು. ಈ ಕುರಿತ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪನೆ ಮಾಡಲಾಗಿದೆ. ಈ ಮೂಲಕ ನಮ್ಮ ನೌಕರರಿಗೆ ಉಡುಗೊರೆ ನೀಡಲಾಗಿದೆ ಎಂದರು।
ಈ ಯೋಜನೆ ಜಾರಿಯಿಂದ ಸರ್ಕಾರಕ್ಕೆ ಹಣಕಾಸಿನ ಎದುರಾಗುವುದು ನಿಜವಾದರೂ, ನಾವು ಭರವಸೆ ನೀಡಿದಂತೆ ಬದ್ಧತೆ ಉಳಿಸಿಕೊಂಡಿದ್ದೇವೆ ಎಂದರು.
ಇದರಿಂದಾಗಿ ವಾರ್ಷಿಕ ₹800–₹900 ಕೋಟಿ ವೆಚ್ಚವಾಗಲಿದೆ. ಡೀಸೆಲ್ ಸೇರಿದಂತೆ ಇತರೆ ತೆರಿಗೆಗಳ ಮೂಲಕ ಇದನ್ನು ಸರಿದೂಗಿಸಲಾಗುವುದು ಎಂದು ಸುಖು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.