ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ ಕಾಂಗ್ರೆಸ್‌ ಉಪಾಧ್ಯಕ್ಷ ಎಸ್‌ಪಿ ಸೇರ್ಪಡೆ

Last Updated 1 ಅಕ್ಟೋಬರ್ 2021, 11:42 IST
ಅಕ್ಷರ ಗಾತ್ರ

ಲಖನೌ: ಕಾಂಗ್ರೆಸ್‌ನ ಉತ್ತರ ಪ್ರದೇಶ ಘಟಕದ ಉಪಾಧ್ಯಕ್ಷ ಗಾಯದೀನ್ ಅನುರಾಗಿ ಅವರು ಶುಕ್ರವಾರ ಪಕ್ಷ ತೊರೆದು, ಸಮಾಜವಾದಿ ಪಕ್ಷ ಸೇರಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮೊದಲೇ ತಮ್ಮ ಪಕ್ಷಕ್ಕೆ ವಿದಾಯ ಹೇಳಿರುವ ಅನುರಾಗಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸಮ್ಮುಖದಲ್ಲಿ ಪಕ್ಷ ಸೇರಿದರು. ‘ಕಾಂಗ್ರೆಸ್‌ನಲ್ಲಿ ನಮ್ಮ ಧ್ವನಿಗೆ ಬೆಲೆ ಇಲ್ಲ’ ಎಂದು ಆರೋಪಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಪ್ರಯತ್ನಿಸುತ್ತಿದ್ದರೂ ಹಿರಿಯ ನಾಯಕರು ಪಕ್ಷ ತೊರೆಯುತ್ತಿರುವ ಬೆಳವಣಿಗೆ ಮುಂದುವರಿದಿದೆ. ಪ್ರಿಯಾಂಕಾ ಅವರು ಪಕ್ಷವು ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆ ಪರಿಶೀಲಿಸಲು ಹಮ್ಮಿಕೊಂಡಿದ್ದ ಐದು ದಿನಗಳ ರಾಜ್ಯ ಪ್ರವಾಸವನ್ನು ಶುಕ್ರವಾರವಷ್ಟೇ ಪೂರ್ಣಗೊಳಿಸಿದ್ದರು.

ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ದಿವಂಗತ ಕಮಲಪತಿ ತ್ರಿಪಾಠಿಯವರ ಮೊಮ್ಮಗ ಲಲಿತೇಶ್ ಪತಿ ತ್ರಿಪಾಠಿ ಇತ್ತೀಚೆಗಷ್ಟೇ ಪಕ್ಷಕ್ಕೆ ವಿದಾಯ ಹೇಳಿದ್ದರು. ಕಾಂಗ್ರೆಸ್‌ನ ಮಾಜಿ ನಾಯಕ ಜಿತೇಂದ್ರ ಪ್ರಸಾದ್ ಅವರ ಪುತ್ರ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ ಅವರು ಬಿಜೆಪಿ ಸೇರಿದ ಕೆಲವು ತಿಂಗಳ ನಂತರ ಕಾಂಗ್ರೆಸ್‌ ನಾಯಕರ ಪಕ್ಷ ತೊರೆಯುವ ಬೆಳವಣಿಗೆ ಮುಂದುವರಿದಿದೆ.

ಜನ ಪರಿವರ್ತನಾ ದಳದ ಅಧ್ಯಕ್ಷ ಜೆ.ಪಿ. ಧಂಗರ್ ಅವರು ತಮ್ಮ ಪಕ್ಷ ಸಮಾಜವಾದಿ ಪಕ್ಷದೊಂದಿಗೆ ವಿಲೀನಗೊಳಿಸುವುದಾಗಿ ಇದೇ ಸಂದರ್ಭ ಘೋಷಿಸಿದರು.

ಎಸ್‌ಪಿಗೆ ಸೇರಿದ ಪ್ರಮುಖರಲ್ಲಿ ದಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಭಾರತೀಯ, ಬಲರಾಂಪುರದ ಮಾಜಿ ಸಂಸದ ರಿಜ್ವಾನ್ ಜಹೀರ್, ಮಾಜಿ ಶಾಸಕರಾದ ಆರ್.ಪಿ. ಕುಶ್ವಾಹ ಮತ್ತು ವಿನೋದ್ ಚತುರ್ವೇದಿ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT