ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು, ‘ಸಂವಿಧಾನವು ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದ್ದು, ದೇಶವು ಇನ್ನು ಮುಂದೆ ಒಕ್ಕೂಟ ರಾಷ್ಟ್ರವಾಗಿ ಉಳಿಯದು’ ಎಂದು ಅತಂಕ ವ್ಯಕ್ತಪಡಿಸಿದ್ದಾರೆ.
ಸಂವಿಧಾನದ ದಿನದ ನಿಮಿತ್ತ ನೀಡಿರುವ ಹೇಳಿಕೆಯಲ್ಲಿ ‘2014ರಲ್ಲಿ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದಲೂ, ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್ಎಸ್ಎಸ್) ಅಧಿಕಾರವನ್ನು ಸಂವಿಧಾನವು ನೀಡಿರುವ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಬಳಸುತ್ತಿದೆ’ ಎಂದು ಆರೋಪಿಸಿದ್ದಾರೆ.
‘ಭಾರತೀಯ ಸಂವಿಧಾನದ ಬಿಕ್ಕಟ್ಟು’ ಶೀರ್ಷಿಕೆಯಡಿಯಲ್ಲಿ ಹೇಳಿಕೆ ನೀಡಿರುವ ಅವರು, ‘ಏಳು ದಶಕಗಳಿಂದ ಕಾಲದ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ಸಂವಿಧಾನಕ್ಕೆ ಇಂದು ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಾಗಿದೆ’ ಎಂದೂ ಅವರು ಹೇಳಿದ್ದಾರೆ.