ಘಾಜಿಯಾಬಾದ್: ಉತ್ತರ ಪ್ರದೇಶದ ಮುರಾದ್ನಗರದ ಸ್ಮಶಾನದಲ್ಲಿ ಭಾನುವಾರ ಸಂಭವಿಸಿದ ಸಂಕೀರ್ಣವೊಂದರ ಚಾವಣಿ ಕುಸಿತ ದುರಂತದಲ್ಲಿ ಸತ್ತವರ ಸಂಖ್ಯೆ 24ಕ್ಕೆ ಏರಿದ್ದು, ಘಟನೆಗೆ ಸಂಬಂಧಿಸಿದಂತೆ ಘಾಜಿಯಾಬಾದ್ ಪೊಲೀಸರು ಮಹಾನಗರ ಪಾಲಿಕೆಯ ಮೂವರು ಅಧಿಕಾರಿಗಳನ್ನು ಸೋಮವಾರ ಬಂಧಿಸಿದ್ದಾರೆ.
‘ಘಟನೆಯ ಸಂಬಂಧ ಮಹಾನಗರ ಪಾಲಿಕೆಯ ಕಾರ್ಯನಿರ್ವಹಣಾಧಿಕಾರಿ ನಿಹಾರಿಕಾ ಸಿಂಗ್, ಜೂನಿಯರ್ ಎಂಜಿನಿಯರ್ ಚಂದ್ರಪಾಲ್ ಮತ್ತು ಸೂಪರ್ವೈಸರ್ ಆಶಿಶ್ ಅವರನ್ನು ಬಂಧಿಸಿರುವುದಾಗಿ ಮುರಾದ್ನಗರ ಗ್ರಾಮಾಂತರ ವಿಭಾಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.
ಈ ನಡುವೆ ಮೃತರ ಕುಟುಂಬದವರು ಹೆಚ್ಚುವರಿ ಪರಿಹಾರ ಹಾಗೂ ಪ್ರತಿ ಕುಟುಂಬಕ್ಕೆ ಸರ್ಕಾರಿ ಕೆಲಸ ನೀಡುವಂತೆ ಒತ್ತಾಯಿಸಿ ದೆಹಲಿ –ಮೀರತ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಶವಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸ್ಮಶಾನಕ್ಕೆ ತೆರಳಿದ್ದ 24 ಮಂದಿ, ಸುರಿಯುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯ ಕೆಳಗೆ ನಿಂತಿದ್ದರು. ಜೋರಾದ ಮಳೆಯಿಂದಾಗಿ ಚಾವಣಿ ಕುಸಿದ ಪರಿಣಾಮ ಸ್ಥಳದಲ್ಲೇ 15 ಮಂದಿ ಸಾವನ್ನಪ್ಪಿದ್ದರು.
ಘಟನೆಯಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.