ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ಷಿಣಿಸುತ್ತಿದ್ದು ಕೋವಿಡ್ ಲಸಿಕೆ ಅಭಿಯಾನಕ್ಕೆ ದಿನಗಣನೇ ಆರಂಭವಾಗಿದೆ.
ದೇಶದಾದ್ಯಂತ ಕೋವಿಡ್ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ನಾಳೆ (ಜ.11) ಸಂಜೆ 4 ಗಂಟೆಗೆ ಚರ್ಚೆ ನಡೆಸಲಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಎಲ್ಲಾ ರಾಜ್ಯಗಳ ಮುಖ್ಯಮುಂತ್ರಿಗಳು ಚರ್ಚೆಯಲ್ಲಿ ಪಾಲ್ಗೊಳಲ್ಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಲಾಗುವುದು. ಮೊದಲು 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ಹಾಕಲಾಗುವುದು. ಆ ಬಳಿಕ 50 ವರ್ಷ ಮೇಲ್ಪಟ್ಟ, 50 ವರ್ಷದೊಳಗಿನ(ಅನಾರೋಗ್ಯ ಪೀಡಿತ) 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,645 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 201 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈ ವರೆಗೆ ಒಟ್ಟು 1,04,50,284 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,50,999 ಮಂದಿ ಸಾವಿಗೀಡಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 19,299 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,00,75,950ಕ್ಕೆ ತಲುಪಿದೆ. 2,23,335 ಸಕ್ರಿಯ ಪ್ರಕರಣಗಳಿವೆ.
ಕೋವಿಡ್ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.96.42ಕ್ಕೆ ತಲುಪಿದ್ದು, ಶೇ.2.14 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.44 ಇದೆ.