ಮುಂಬೈ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಶಿವಸೇನೆ, ಕೇಂದ್ರ ಹಾಗೂ ರಾಜ್ಯಗಳ ನಡುವಣ ಬಾಂಧವ್ಯ ಹದಗೆಡುತ್ತಿದ್ದು, ಇದು ದೇಶದ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆಯಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಎಚ್ಚರಿಸಿದೆ.
ಶಿವಸೇನೆಯ ಮುಖಪತ್ರಿಕೆ ಸಾಮ್ನಾ ಸಂಪಾದಕೀಯದಲ್ಲಿ ಈ ಬಗ್ಗೆ ಉಲ್ಲೇಖಿಸಲಾಗಿದ್ದು, ಹಲವು ವಿಷಯಗಳಲ್ಲಿ ಸುಪ್ರೀಂ ಕೋರ್ಟ್ ತನ್ನ ಕರ್ತವ್ಯವನ್ನು ಮರೆತಿದೆ ಎಂದು ಹೇಳಿದೆ.
ರಾಜಕೀಯ ಉದ್ದೇಶಕ್ಕಾಗಿ ಜನರಿಗೆ ಹಾನಿ ಮಾಡುತ್ತಿದೆ ಎಂಬುದನ್ನು ಕೇಂದ್ರ ಸರ್ಕಾರ ಮನಗಾಣದಿದ್ದರೆ, ನಮ್ಮ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆಯಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. 2020ನೇ ವರ್ಷದಲ್ಲಿ ಕೇಂದ್ರ ಸರ್ಕಾರದ ಸಾಮರ್ಥ್ಯ ಹಾಗೂ ವಿಶ್ವಾಸಾರ್ಹತೆಯು ಪ್ರಶ್ನಾರ್ಥಕ ಚಿಹ್ನೆಯನ್ನು ಸೃಷ್ಟಿಸುತ್ತದೆ ಎಂದು ಹೇಳಿದೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ಮಾಡಿದ್ದಾರೆ ಎಂಬ ಬಿಜೆಪಿ ಮುಖಂಡ ವಿಜಯ್ವರ್ಗಿಯಾ ಹೇಳಿಕೆಯನ್ನು ಪತ್ರಿಕೆಯು ಉಲ್ಲೇಖಿಸಿದೆ.
ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆಯೇ ? ಪ್ರಧಾನಿ ದೇಶಕ್ಕೆ ಸೇರಿದವರು. ದೇಶ ಒಕ್ಕೂಟವಾಗಿ ನೆಲೆನಿಂತಿದೆ. ಬಿಜೆಪಿ ಸರ್ಕಾರಗಳನ್ನು ಹೊಂದಿರದ ರಾಜ್ಯಗಳು ಸಹ ರಾಷ್ಟ್ರೀಯ ಹಿತಾಸಕ್ತಿಯ ಬಗ್ಗೆ ಚರ್ಚಿಸುತ್ತವೆ. ಆದರೆ ಅಂತಹ ಭಾವನೆಯನ್ನು ನಿರ್ಮೂಲನೆ ಮಾಡಲಾಗುತ್ತಿದೆ ಎಂದು ಹೇಳಿದೆ.
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹತ್ತಿಕ್ಕಲು ಕೇಂದ್ರ ಸರಕಾರವು ಪ್ರಯತ್ನಿಸುತ್ತಿದೆ ಎಂದು ಶಿವಸೇನೆ ಆರೋಪಿಸಿದೆ.
ಪ್ರಜಾಪ್ರಭುತ್ವದಲ್ಲಿ ರಾಜಕೀಯ ಸೋಲುಗಳು ಸಾಮಾನ್ಯವಾಗಿದೆ. ಆದರೆ ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಉಚ್ಛಾಟಿಸಲು ಕೇಂದ್ರ ಸರಕಾರ ಅನುಸರಿಸುತ್ತಿರುವ ನೀತಿಯು ತುಂಬಾನೇ ಬೇಸರ ತರಿಸುತ್ತಿದೆ ಎಂದಿದೆ.