ನವದೆಹಲಿ: ₹ 200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದ್ದರೂ ಏಕೆ ಬಂಧಿಸಲಿಲ್ಲ ಎಂದು ದೆಹಲಿ ನ್ಯಾಯಾಲಯ ಶುಕ್ರವಾರ ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ.
ವಂಚಕ ಸುಕೇಶ್ ಚಂದ್ರಶೇಖರ್ ಆರೋಪಿಯಾಗಿರುವ ಈ ಪ್ರಕರಣದಲ್ಲಿ ನಟಿಬಂಧನ ವಿಷಯದಲ್ಲಿ ಮನಸೋ ಇಚ್ಚೆಯಾಗಿ ವರ್ತಿಸುವ ತನಿಖಾ ಸಂಸ್ಥೆಯ ಕಾರ್ಯವೈಖರಿಯನ್ನುಇದೇ ವೇಳೆ ಪೀಠ ಟೀಕಿಸಿತು.
ಈ ಹಿಂದೆಜಾಕ್ವೆಲಿನ್ ಅವರಿಗೆ ಮಧ್ಯಂತರ ಜಾಮೀನು ನೀಡಿದ್ದ ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್, ಜಾಕ್ವೆಲಿನ್ ಪರ ವಕೀಲರು ಮತ್ತು ಇ.ಡಿ ಪರ ವಕೀಲರ ವಾದ-ಪ್ರತಿವಾದ ಆಲಿಸಿದ ನಂತರ ನಟಿಯ ಜಾಮೀನು ಅರ್ಜಿಯ ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದರು.
ಹಣದ ಕೊರತೆಯಿಲ್ಲದ ಕಾರಣ ಜಾಕ್ವೆಲಿನ್ ಸುಲಭವಾಗಿ ದೇಶದಿಂದ ಪರಾರಿಯಾಗಬಹುದು ಎಂದು ಸಂಸ್ಥೆ ಸಲ್ಲಿಸಿದ ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ, ನಟಿಯನ್ನು ಇಲ್ಲಿಯವರೆಗೆ ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿತು.
ನಟಿ ದೇಶ ತೊರೆಯುವುದನ್ನು ತಡೆಯಲು ವಿಮಾನ ನಿಲ್ದಾಣಗಳಲ್ಲಿ ಲುಕ್ ಔಟ್ ಸುತ್ತೋಲೆ (ಎಲ್ಒಸಿ) ಹೊರಡಿಸಲಾಗಿದೆ ಎಂದು ಇ.ಡಿ ತಿಳಿಸಿತು.
‘ಎಲ್ಒಸಿ ನೀಡಿದ್ದರೂ ತನಿಖೆ ಸಮಯದಲ್ಲಿ ಜಾಕ್ವೆಲಿನ್ ಅವರನ್ನು ಏಕೆ ಬಂಧಿಸಿಲ್ಲ? ಇತರೆ ಆರೋಪಿಗಳು ಜೈಲಿನಲ್ಲಿದ್ದಾರೆ.ಮನಸೋ ಇಚ್ಛೆಯಾಗಿ ಯಾಕೆ ವರ್ತಿಸುತ್ತೀರಾ’ ಎಂದು ತನಿಖಾ ಸಂಸ್ಥೆಯನ್ನು ಪೀಠ ಪ್ರಶ್ನಿಸಿದೆ.
ಈಗಾಗಲೇ ತನಿಖೆ ಪೂರ್ಣಗೊಂಡು ಚಾರ್ಜ್ ಶೀಟ್ ಸಲ್ಲಿಕೆ ಆಗಿರುವುದರಿಂದ ಕಸ್ಟಡಿ ಅಗತ್ಯವಿಲ್ಲ ಎಂದು ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.